ಸಂಪೂರ್ಣ ಮಾಹಿತಿ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ
ಜಿಪಂ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ ಅಂಗೀಕಾರದ ವಿಚಾರ
ಬೆಂಗಳೂರು, ಅ.17: ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ 15 ದಿನಗಳಲ್ಲಿ ತನ್ನಿಂದ ತಾನೇ ರಾಜೀನಾಮೆ ಅಂಗೀಕಾರವಾಗುವ ನಿಯಮವನ್ನು ಸಂವಿಧಾನ ಬಾಹಿರ ಎಂಬುದಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಸಂಬಂಧ ರಾಜ್ಯದ ಹಲವು ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜಕೀಯ ಪಕ್ಷಗಳು ಜಿಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೇಲೆ ಒತ್ತಡವನ್ನು ಹೇರಿ ರಾಜೀನಾಮೆ ಪಡೆದುಕೊಳ್ಳುತ್ತಾರೆ. ಹೀಗಾಗಿ, ರಾಜೀನಾಮೆ ನೀಡಿದ 15 ದಿನಗಳಲ್ಲಿ ತನ್ನಿಂದ ತಾನೇ ರಾಜೀನಾಮೆ ಅಂಗೀಕಾರವಾಗುವ ನಿಯಮವನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಈವರೆಗೂ ಎಷ್ಟು ಮಂದಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಆ ಪೈಕಿ ಎಷ್ಟು ಮಂದಿ ರಾಜೀನಾಮೆ ಪತ್ರ ಹಿಂಪಡೆದುಕೊಂಡಿದ್ದಾರೆ ಎಂಬುದರ ಕುರಿತು ಮಾಹಿತಿ ನೀಡುವಂತೆ ನ್ಯಾಯಪೀಠವು ಸರಕಾರಕ್ಕೆ ಸೂಚಿಸಿ ಅರ್ಜಿ ವಿಚಾಣೆಯನ್ನು ಅ.24ಕ್ಕೆ ಮುಂದೂಡಿದೆ.