ಕಲ್ಲಡ್ಕದಲ್ಲಿ ವ್ಯಕ್ತಿಗೆ ಚೂರಿ ಇರಿತ
ಬಂಟ್ವಾಳ, ಡಿ. 26: ಕಳೆದ ಮೇ ತಿಂಗಳಲ್ಲಿ ನಡೆದ ಅಹಿತಕರ ಘಟನೆಯ ಬಳಿಕ ಸಹಜ ಸ್ಥಿತಿಯಲ್ಲಿದ್ದ ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಕೃತ್ಯದಿಂದ ಕಲ್ಲಡ್ಕ ಪರಿಸರ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದೆ.
ಕರೋಪಾಡಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿಗಳ ಪೈಕಿ ಓರ್ವನಾದ ವೀರ ಕಂಬದ ಕೇಶವ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗಾಯಾಳುವಿಗೆ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಕೇಶವ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ
ಕೇಶವ ಸಂಜೆ ಮನೆಯಿಂದ ತನ್ನ ದ್ವಿಚಕ್ರ ವಾಹನದಲ್ಲಿ ಕಲ್ಲಡ್ಕಕ್ಕೆ ಆಗಮಿಸಿ ಅಂಗಡಿಯೊಂದರ ಸಮೀಪ ನಿಂತಿದ್ದ ಸಂದರ್ಭ ಹೆಲ್ಮೆಟ್ ಧರಿಸಿದ್ದ ಇಬ್ಬರು ಏಕಾಏಕಿಯಾಗಿ ಈತನ ಮೇಲೆ ದಾಳಿ ನಡೆಸಿ ಚೂರಿಯಿಂದ ಇರಿದು ವಿಟ್ಲ ರಸ್ತೆಯಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ದಿಢೀರನೇ ನಡೆದ ಈ ಘಟನೆಯಿಂದ ಸ್ಥಳದಲ್ಲಿ ಆತಂಕಿತ ವಾತವಾರಣ ಉಂಟಾಗಿದ್ದು, ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಕಲ್ಲಡ್ಕದ ಮೇಲಿನ ಪೇಟೆ ಮತ್ತು ವಿಟ್ಲ ರಸ್ತೆಯಲ್ಲಿರುವ ಎಲ್ಲ ಅಂಗಡಿ, ಮುಂಗಟ್ಟುಗಳನ್ನು ಮುಂಜಾಗೃತಕ್ರಮವಾಗಿ ಮುಚ್ಚಿಸಿದರು.
ಸುದ್ದಿ ತಿಳಿದ ಬಂಟ್ವಾಳ ನಗರ ಹಾಗೂ ಗ್ರಾಮಾಂತರ, ವಿಟ್ಲ, ಪುತ್ತೂರು, ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಕೋಮು ಸೂಕ್ಷ್ಮವಾದ ಕಲ್ಲಡ್ಕದಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದ ಅಹಿತಕರ ಘಟನೆಯಿಂದ ಈಗಾಗಲೇ ಚೇತರಿಸಿಕೊಂಡ ಬೆನ್ನಲ್ಲೆ ಮತ್ತೆ ಅಶಾಂತಿ ಸೃಷ್ಠಿಯಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ದೌಡು
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮುಂಜಾಗೃತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ. ಕಲ್ಲಡ್ಕ, ವಿಟ್ಲದಾದ್ಯಂತ ಬಿಗು ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ. ಅಲ್ಲದೆ ಬಿ.ಸಿ.ರೋಡ್ ಹಾಗೂ ಕೈಕಂಬದಲ್ಲಿಯೂ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಜಲೀಲ್ ಕರೋಪಾಡಿಯ ಕೊಲೆ ಆರೋಪಿ
ಕರೋಪಾಡಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದಲ್ಲಿ ಕೇಶವ ಪ್ರಮುಖ ಆರೋಪಿಯಾಗಿದ್ದ. ಈತ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದಿದ್ದ ಎನ್ನಲಾಗಿದೆ.
ಜಲೀಲ್ ಕರೋಪಾಡಿಯ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಈ ಕೃತ್ಯ ನಡೆದಿರುವ ಬಗ್ಗೆ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯಲ್ಲಿ ಶಂಕಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಕಲ್ಲಡ್ಕ ನಿಯಂತ್ರಣದಲ್ಲಿ
ಕಲ್ಲಡ್ಕ ಸಂಪೂರ್ಣ ಪೊಲೀಸರ ನಿಯಂತ್ರಣದಲ್ಲಿದ್ದು, ಸುತ್ತಮುತ್ತಲಿನ ಪ್ರದೇಶಗಳು, ಆಯಕಟ್ಟಿನ ಜಾಗಗಳಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವದಂತಿಗಳಿಗೆ ಕಿವಿಕೊಡಬೇಡಿ ಎಂದು ಬಂಟ್ವಾಳ ಠಾಣೆ ಪೊಲೀಸರು ಸೂಚನೆ ನೀಡಿದ್ದಾರೆ.