ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿ, ನೌಕರರ ಕ್ರೀಡಾಕೂಟ
ಉಡುಪಿ, ಜ.21: ಉಡುಪಿ ನಗರಸಭೆ ಹಾಗೂ ಗಣರಾಜ್ಯೋತ್ಸವ ಕ್ರೀಡಾ ಕೂಟ ಸಮಿತಿಯ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯ ಸದಸ್ಯರು, ಸಿಬ್ಬಂದಿ ವರ್ಗದವರಿಗೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗಮಂದಿರದಲ್ಲಿ ರವಿವಾರ ಆಯೋಜಿಸಲಾದ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಪರಸ್ಪರ ಭಾತೃತ್ವ ಮೂಡಲು ಸಾಧ್ಯ. ಜನರಿಗೆ ಅತಿ ಹತ್ತಿರದಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ನೌಕರರು ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ. ಇಂತಹ ಕ್ರೀಡಾಕೂಟಗಳಿಂದ ಒತ್ತಡವನ್ನು ನಿವಾರಣೆ ಮಾಡಲು ಸಾಧ್ಯ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಪೌರಾಯುಕ್ತ ಡಿ.ಮಂಜುನಾಥಯ್ಯ, ಕ್ರೀಡಾ ಸಮಿತಿ ಗೌರವಾ ಧ್ಯಕ್ಷ ಕುಶಲ ಶೆಟ್ಟಿ, ಕುಂದಾಪುರ ಪುರಸಭಾ ಅಧ್ಯಕ್ಷೆ ವಸಂತಿ ನಾರಂಗ್, ಉಪಾ ಧ್ಯಕ್ಷ ರಾಜೇಶ್ ಕಾವೇರಿ, ಕಾಪು ಪುರಸಭಾ ಅಧ್ಯಕ್ಷೆ ಸೌಮ್ಯಾ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ರತ್ನಾ ನಾಗರಾಜ್, ಕಾಪು ಪುರಸಭೆ ಮುಖ್ಯಾಧಿ ಕಾರಿ ರಾಯಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ನಗರಸಭಾ ಸದಸ್ಯ ಜನಾರ್ದನ ಭಂಡಾರ್ಕರ್, ರಮೇಶ್ ಕಾಂಚನ್ ಮೊದಲಾ ದವರು ಉಪಸ್ಥಿತರಿದ್ದರು.