ಫೆ.12ರಂದು 1-19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣೆ ಮಾತ್ರೆ ವಿತರಣೆ
ಮಂಗಳೂರು, ಫೆ.9: ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಅಂಗವಾಗಿ ಫೆ.12ರಂದು 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಪ್ರತೀ ಶಾಲೆಗಳ ಮೂಲಕ ವಿತರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಂ.ರಾಮಕೃಷ್ಣ ರಾವ್ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಅನುದಾನರಹಿತ ಶಾಲೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತು ಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.
ಜಂತುಹುಳ ನಿವಾರಣಾ ಮಾತ್ರೆಯಿಂದಾಗಿ ರಕ್ತಹೀತನೆಯನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಷೌಷ್ಠಿಕತೆಯಲ್ಲಿ ಸುಧಾರಣೆಯಾಗಲಿದೆ. ರೋಗ ನಿರೋಧ ಶಕ್ತಿ ಹೆಚ್ಚಾಗುವುದು, ಏಕಾಗ್ರತೆ ಕಲಿಕೆಯ ಶಕ್ತಿ ಹಾಗೂ ಶಾಲಾ ಹಾಜರಾತಿ ಸುಧಾರಿಸುತ್ತದೆ. ಅಲ್ಲದೇ ಇದು ಯಾವುದೇ ರೀತಿಯಲ್ಲೂ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.
ಫೆ.12ರಂದು ನಗರದ ಬಂದರು ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ನೋಡೆಲ್ ಅಧಿಕಾರಿ ಮುಹಮ್ಮದ್ ಶರೀಫ್, ಆರ್ ಸಿ.ಎಚ್. ಅಧಿಕಾರಿ ಡಾ.ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.