ಮಂಗಳೂರು : ಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಕ್ಕೆ ಎಸ್ಡಿಪಿಐ ಒತ್ತಾಯ
ಮಂಗಳೂರು, ಮೇ 21: ಇವಿಎಂ ದುರುಪಯೋಗದ ವಿರುದ್ಧ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಅವರು ಎಲೆಕ್ಟ್ರಾನಿಕ್ ಮತ ಯಂತ್ರದ ಮೂಲಕ ಪಾರದರ್ಶಕ ಚುನಾವಣೆ ನಡೆಯುವುದು ಅಸಾಧ್ಯವಾಗಿದ್ದು, ಮುಂದಿನ ಚುನಾವಣೆಗಳಲ್ಲಿ ಇಂತಹ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.
ಚುನಾವಣಾ ಫಲಿತಾಂಶಗಳ ನಂತರ ಇವಿಎಂಗಳ ಬಗ್ಗೆ ಅನುಮಾನ ಉಂಟಾಗಿ ಮಂಗಳೂರು ಸಹಿತ ಹಲವು ಕಡೆಗಳಲ್ಲಿ ದೂರು ದಾಖಲಾಗಿವೆ. ಅಲ್ಲದೆ, ಇಂತಹ ಮತಯಂತ್ರಗಳ ದುರುಪಯೋಗಕ್ಕೆ ಸಂಬಂಧಿ ಕೆಲವು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ. ಇವಿಎಂಗಳ ಬಗ್ಗೆ ಕೇಳಿ ಬಂದಿರುವ ದೂರುಗಳ ಸಮಗ್ರ ತನಿಖೆ ನಡೆಯಬೇಕು. ಬಂಧನಕ್ಕೊಳಗಾಗಿರುವ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲಾ ಜೋಕಟ್ಟೆ, ಕಾರ್ಪೊರೇಟರ್ ಅಯಾಝ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲ್, ಎಸ್ಡಿಟಿಯು ರಾಜ್ಯಾಧ್ಯಕ್ಷ ಜಲೀಲ್ ಕೃಷ್ಣಾಪುರ, ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಕ್ಯಾಂಪಸ್ ಫ್ರಂಟ್ನ ಜಿಲ್ಲಾಧ್ಯಕ್ಷ ಇಮ್ರಾನ್ ಪಿ.ಜೆ. ಮೊದಲಾದವರು ಉಪಸ್ಥಿತರಿದ್ದರು.
ಮುನೀಬ್ ಬೆಂಗರೆ ಸ್ವಾಗತಿಸಿ, ವಂದಿಸಿದರು. ಹಾರಿಸ್ ಮಲಾರ್ ಕಾರ್ಯಕ್ರಮ ನಿರೂಪಿಸಿದರು.