ಕೊಕ್ಕಡ: ಅಪರಿಚಿತ ಮೃತದೇಹ ಪತ್ತೆ
ಉಪ್ಪಿನಂಗಡಿ, ಜು.24: ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಮಂಗಳವಾರ ಪತ್ತೆಯಾಗಿದೆ.
ಕಾಪಿನಬಾಗಿಲು ಎಂಬಲ್ಲಿ ಹೆದ್ದಾರಿ ಬದಿಯಲ್ಲಿಯೇ ಹಾಕಿರುವ ತ್ಯಾಜ್ಯ ರಾಶಿಯಲ್ಲಿ ಪ್ಲಾಸ್ಟಿಕ್ ಹೊದಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ಕೊಳೆತು ದುರ್ವಾಸನೆ ಬೀರುತ್ತಿತ್ತು. ಮೃತ ವ್ಯಕ್ತಿ ಸುಮಾರು 40ರಿಂದ 45ವಯಸ್ಸಿನವರು ಎಂದು ಅಂದಾಜಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ನೆಲ್ಯಾಡಿ ಹೊರಠಾಣೆ ಪೊಲೀಸರು, ಸ್ಥಳದಲ್ಲಿ ದೊರೆತ ವಿಸಿಟಿಂಗ್ ಕಾರ್ಡ್ ಹಾಗೂ ಮೃತದೇಹದ ವಸ್ತ್ರದ ನೆಲೆಗಟ್ಟಿನಲ್ಲಿ ಮಾಹಿತಿ ಕಲೆ ಹಾಕಿದ್ದು, ಪತ್ತೆಯಾದ ಮೃತದೇಹವು ಮಂಡ್ಯದ ಕೆ.ಆರ್.ಪೇಟೆ ನಿವಾಸಿ ಲಕ್ಷ್ಮೀನಾರಾಯಣ ಎಂಬವರದ್ದಾಗಿರಬಹುದೆಂದು ಶಂಕಿಸಿದ್ದಾರೆ.
ಲಕ್ಷ್ಮೀನಾರಾಯಣ ಅವರ ಕುಟುಂಬಸ್ಥರು ಮೃತದೇಹವನ್ನು ಗುರುತಿಸಿದ ಬಳಿಕ ಶವದ ಗುರುತು ಪತ್ತೆಯನ್ನು ದೃಢೀಕರಿಸಲಾಗುವುದೆಂದು ಪೊಲೀಸ್ ಇಲಾಖೆ ತಿಳಿಸಿದೆ.
ಸ್ಥಳೀಯ ಪಂಚಾಯತ್ ಕಾರ್ಯದರ್ಶಿ ಸತೀಶ್ ಬಂಗೇರ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.