ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ತೋನ್ಸೆ
ಉಡುಪಿ, ಆ. 29: ಆ.31ರಂದು ನಡೆಯುವ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಸಾಲಿಗ್ರಾಮಗಳ ಸ್ಥಳಿಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಲವಾಗಿ ಜಯಗಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಂಚಾಯತ್ರಾಜ್ ಸಂಸ್ಥೆಗಳ ಮಾದರಿಯಲ್ಲಿಯೇ ಇದೇ ಮೊದಲ ಬಾರಿಗೆ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಕಲ್ಪಿಸಲಾಗಿದೆ. ಇದು ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಬಲ ನೀಡಲಿದೆ. ಇದರಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ರಂಗವಲ್ಲದೆ ರಾಜಕೀಯ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಪ್ರಾತಿನಿದ್ಯ ದೊರೆತಂತಾಗಲಿದೆ ಎಂದವರು ಹೇಳಿದ್ದಾರೆ.
ಕಳೆದ ಬಾರಿಯಂತೆ ಈ ಬಾರಿಯೂ ಉಡುಪಿ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ನಗರದ ಜನತೆ ಬಿಜೆಪಿಯ ಈ ಹಿಂದಿನ ದುರಾಡಳಿತ, ಭ್ರಷ್ಟಾಚಾರಗಳನ್ನು ಮರೆತಿಲ್ಲ. ಕಾಂಗ್ರೆಸ್ ಆಡಳಿತಾವಧಿಯ ಅಭಿವೃದ್ಧಿಯನ್ನು ಜನರ ಮುಂದಿಟ್ಟು ನಗರಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ಹಾಕಿ ಗೆಲ್ಲಿಸುವಂತೆ ಮತದಾರರಿಗೆ ಮನವರಿಕೆ ಮಾಡಲಾಗಿದೆ ಎಂದರು.
ಸ್ಥಳೀಯ ಮಟ್ಟದಲ್ಲಿ ಸಚ್ಚಾರಿತ್ರ ಹೊಂದಿದ ಹಾಗೂ ಪ್ರಭಾವಿಗಳಾಗಿ ದ್ದವರನ್ನು ಪಕ್ಷ ಸ್ಪರ್ಧೆಗೆ ಇಳಿಸಿದೆ. ಇವರೆಲ್ಲ ಜನಪರವಾಗಿ ಕೆಲಸ ಮಾಡಿದವರು. ಹೀಗಾಗಿ ಬಿಜೆಪಿಯ ಯಾವುದೇ ಸುಳ್ಳು ವದಂತಿಗಳು ಈ ಚುನಾವಣೆಯಲ್ಲಿ ಕಾರ್ಯರೂಪಕ್ಕೆ ಬರಲಾರದು. ಅಭಿವೃದ್ಧಿಪರ ಕಾಂಗ್ರೆಸ್ ಎನ್ನುವ ಭಾವನೆ ಸ್ಥಳೀಯ ಮತದಾರರಲ್ಲಿದೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗಿದ್ದರೂ ಈ ಬಾರಿ ಚುನಾವಣೆಯಲ್ಲಿ ಪಕ್ಷ ಮತ್ತೆ ಜಿಲ್ಲೆ ಯ 4 ಕಡೆ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ಕಾಂಗ್ರೆಸ್ಗೆ: ಇದೇ ವೇಳೆ ಗೋಪಾಲಪುರ ವಾರ್ಡ್ ನ ನಯಂಪಳ್ಳಿಯ ಬಿಜೆಪಿ ವಾರ್ಡ್ ಕಾರ್ಯದರ್ಶಿ ನವೀನ್ ನಾಯಕ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.