ಕುಂದಾಪುರದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ
ಕುಂದಾಪುರ, ಅ.11: ಕುಂದಾಪುರ ಭಂಡಾರ್ಕಾಸ್ ಕಾಲೇಜಿನ ಮನಃಶಾಸ್ತ್ರ ವಿಭಾಗ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಯಿತು. ಕುಂದಾಪುರದ ಮನೋರೋಗ ತಜ್ಞ ಡಾ.ಪ್ರಕಾಶ್ ತೋಳಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘ಬದಲಾಗುತ್ತಿರುವ ಜಗತ್ತಿನಲ್ಲಿ ಯುವ ಜನರು ಮತ್ತು ಮಾನಸಿಕ ಆರೊೀಗ್ಯ’ ದ ಕುರಿತು ಮಾತನಾಡಿದರು.
ಕೆಲವೊಮ್ಮೆ ನಮ್ಮ ದೈಹಿಕ ಆರೋಗ್ಯದ ಅಸ್ವಸ್ಥತೆಗೆ ಮಾನಸಿಕ ಆರೋಗ್ಯ ಕಾರಣವಾಗಿರುತ್ತದೆ. ಜನರು ಮಾನಸಿಕ ಆರೋಗ್ಯವನ್ನು ಕಡೆಗಣಿಸುತ್ತಿದ್ದಾರೆ. ಆದ್ದರಿಂದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಮಕ್ಕಳು ಹೆತ್ತವರೊಡನೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದ ಡಾ.ತೋಳಾರ್, ಯುವ ಜನಾಂಗ ಎದುರುಸುತ್ತಿರುವ ಮಾನಸಿಕ ಸಮಸ್ಯೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಸವಿತಾ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಅ.10ನ್ನು ವಿಶ್ವ ಮಾನಸಿಕ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿ ಭರತ್ ಕುಮಾರ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ನಿಖಿಲ್ ಹಾಗೂ ರಂಜಿನಿ ಕಾರ್ಯಕ್ರಮ ನಿರ್ವಹಿಸಿದರು, ಶ್ರದ್ಧಾ ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು, ಸತ್ಯ ವಂದಿಸಿದರು.