ಭಟ್ಕಳ: ಅಂಜುಮನ್ ಮಾಜಿ ಕಾರ್ಯದರ್ಶಿ ಮುಹ್ಸಿನ್ ಖರೂರಿ ನಿಧನ
ಭಟ್ಕಳ, ನ. 3: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಮಾಜಿ ಕಾರ್ಯದರ್ಶಿ ಮುಹ್ಸಿನ್ ಖರೂರಿ (56) ಮದೀನಾ ಕಾಲನಿಯ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಪತ್ನಿ ಸೇರಿದಂತೆ ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂದುಮಿತ್ರರನ್ನು ಅವರು ಅಗಲಿದ್ದಾರೆ. ಮುಹ್ಸಿನ್ ಖರೂರಿ ಅಂಜುಮನ್ ಸಂಸ್ಥೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಅಂಜುಮನ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಅವರು ಸಂಸ್ಥೆಯ ಶತಮಾನೋತ್ಸವ ಸಮಾರಂಭದ ಸಿದ್ಧತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ನವಾಯತ್ ಕಾಲನಿಯ ಮಿಲ್ಲಿಯಾ ಜಾಮಿಯಾ ಮಸೀದಿಯಲ್ಲಿ ನಡೆದ ಅಂತಿಮ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಅವರ ಅಂತಿಮ ದರ್ಶನ ಪಡೆದರು. ಇವರ ನಿಧನಕ್ಕೆ ಅಂಜುಮನ್ ಸಂಸ್ಥೆ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ, ತಂಝೀಮ್, ಜಮಾಅತೆ ಇಸ್ಲಾಮಿ ಹಿಂದ್ ತರಬಿಯತ್ ಎಜ್ಯುಕೇಶನ್ ಸೂಸೈಟಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು, ಸಂಘಸಂಸ್ಥೆಗಳು ಸಂತಾಪವನ್ನು ಸೂಚಿಸಿದ್ದಾರೆ.
Next Story