ಕುಂದಾಪುರ ತಾಪಂ ಅಧ್ಯಕ್ಷರ ರಾಜೀನಾಮೆ ಅಂಗೀಕಾರ
ಉಡುಪಿ, ಡಿ.18: ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಜಯಶ್ರೀ ಸುಧಾಕರ್ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿರುವ ರಾಜೀನಾಮೆ ಅಂಗೀಕಾರಗೊಂಡಿದೆ.
ಜಯಶ್ರೀ ಸುಧಾಕರ್ ನ.17ರಂದು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿಯ ಮೂಲಕ ರಾಜೀನಾಮೆ ಸಲ್ಲಿಸಿದ್ದು, ಈ ರಾಜೀನಾಮೆ ಅರ್ಜಿಯನ್ನು ಸ್ವೀಕೃತ ವಾಗಿಸುವ ನಿಟ್ಟಿನಲ್ಲಿ ಪಂಚಾಯತ್ರಾಜ್ ಕಾಯಿದೆ ಅನ್ವಯ ಜಯಶ್ರೀ ಸುಧಾಕರ್ ಅವರಿಗೆ ನ.28ರಂದು ಜಿಲ್ಲಾಧಿಕಾರಿ ಕಚೇರಿಯಿಂದ ನೋಟೀಸು ಜಾರಿ ಮಾಡಿ, ಅಧ್ಯಕ್ಷತೆ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂದಕ್ಕೆ ಪಡೆಯಲು ಇಚ್ಛಿಸಿದ್ದಲ್ಲಿ 10 ದಿನಗಳೊಳಗೆ ಲಿಖಿತ ಮನವಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಆದರೆ ಜಯಶ್ರೀ ತನಗೆ ನೀಡಿರುವ ಕಾಲಾವಕಾಶದಲ್ಲಿ ರಾಜೀನಾಮೆಯನ್ನು ಹಿಂದಕ್ಕೆ ಪಡೆಯಲು ಜಿಲ್ಲಾಧಿಕಾರಿ ಕಚೇರಿಗೆ ಲಿಖಿತವಾಗಿ ಮನವಿ ಸಲ್ಲಿಸಿಲ್ಲ. ಆದುದರಿಂದ ಕುಂದಾಪುರ ತಾಪಂ ಅಧ್ಯಕ್ಷ ಸ್ಥಾನಕ್ಕೆ ಸ್ವಇಚ್ಛೆಯಿಂದ ಜಯಶ್ರೀ ಸುಧಾಕರ್ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.