ಬೆಳ್ತಂಗಡಿ: ರಾಜ್ಯ ಸರಕಾರದ ವಿರುದ್ಧ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
ಬೆಳ್ತಂಗಡಿ, ಜ.13: ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸದ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಉಚಿತ ಬೈಸಿಕಲ್ ವಿತರಣೆಯಲ್ಲಿ ವಿಳಂಬವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯವ್ಯಾಪ್ತಿಯಾಗಿ ಕರೆ ನೀಡಿದ್ದ ಪ್ರತಿಭಟನೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಪುಂಜಾಲಕಟ್ಟೆ ಮಾತನಾಡಿ "ಶೈಕ್ಷಣಿಕ ವರ್ಷದಲ್ಲಿ ತಲೆ ದೋರಿರುವ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಕ್ಯಾಂಪಸ್ ಫ್ರಂಟ್ ತನ್ನ ಹೋರಾಟವನ್ನು ತೀವ್ರಗೊಳಿಸಲಿದೆ " ಎಂದು ಎಚ್ಚರಿಕೆ ನೀಡಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶಾಹಿದ್ ಅಲಿ ಗೇರುಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ತಾಲೂಕು ಅಧ್ಯಕ್ಷ ಫಾಝಿಲ್ ಕಕ್ಕಿಂಜೆ, ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದ.ಕ. ಜಿಲ್ಲೆ ಉಪಾಧ್ಯಕ್ಷ ಸಿಯಾಬುದ್ದೀನ್, ಸಿ ಎಫ್ ಐ ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷೆ ಫಾತಿಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಭಟನೆಯನ್ನು ಕ್ಯಾಂಪಸ್ ಫ್ರಂಟ್ ತಾಲೂಕು ಕಾರ್ಯದರ್ಶಿ ಇಮ್ರಾನ್ ಪಾಂಡವರಕಲ್ಲು ಸ್ವಾಗತಿಸಿ, ನಿರೂಪಿಸಿದರು.