ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್ಪಿ ಭೇಟಿ
ಬೆಳ್ತಂಗಡಿ, ಜ. 17: ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್ಪಿ ಕೆ.ಮಾದಯ್ಯ ನೇತೃತ್ವದ ತಂಡ ಗುರುವಾರ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.
ತಾಲೂಕು ಕಚೇರಿಯಲ್ಲಿ ಅರ್ಜಿಗಳ ಸಲ್ಲಿಸಿದ್ದರೂ ಕೆಲಸಗಳು ತ್ವರಿತವಾಗಿ ನಡೆಯುತ್ತಿಲ್ಲ, ಕಡತಗಳು ಸಿಗುತ್ತಿಲ್ಲ, ವಿಳಂಬ ಮಾಡುತ್ತಿದ್ದು ಇಲ್ಲಿನ ಕಾರ್ಯ ವೈಖರಿಯ ಕುರಿತು ದೂರುಗಳ ಬಂದ ಹಿನ್ನಲೆಯಲ್ಲಿ ಇಲ್ಲಾ ಲೋಕಾಯುಕ್ತ ತಂಡ ಭೇಟಿ ನೀಡಿತು.
ತಾಲೂಕು ಕಚೇರಿಗೆ ಬಂದಿದ್ದ ಸಾರ್ವಜನಿಕರಿಂದ ಮಾಹಿತಿಯನ್ನು ಪಡೆದುಕೊಂಡು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು. ಯಾವುದೇ ಅರ್ಜಿಗಳು ಬಂದಲ್ಲಿ ಅದನ್ನು ವಿಳಂಬ ಮಾಡದೇ ವಿಲೇವಾರಿ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರನ್ನು ಕಾಯಿಸಬಾರದು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಮಾದಯ್ಯ ಸೂಚಿಸಿದರು.
ಅಕ್ರಮ-ಸಕ್ರಮ ಅರ್ಜಿ ಸಲ್ಲಿಸಲು ಬೆಳಗ್ಗಿನಿಂದಲೇ ಕಾದು ಕುಳಿತ್ತಿದ್ದ ಜನರನ್ನು ಮಾತನಾಡಿಸಿ, ಅವರಿಂದ ಮಾಹಿತಿ ಪಡೆದುಕೊಂಡರು. ಲೋಕಾಯುಕ್ತ ಸಿಪಿಐ ಭಾರತಿ ಮತ್ತು ಸಿಬ್ಬಂದಿಗಳು ಇದ್ದರು.