ಜ.19ರಿಂದ ಮದ್ಯ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥ
ಉಡುಪಿ, ಜ.18: ಕರ್ನಾಟಕದಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಇದರ ನೇತೃತ್ವದಲ್ಲಿ ಚಿತ್ರದುರ್ಗದಿಂದ ಬೆಂಗಳೂರುವರೆಗೆ ಕಾಲ್ನಡಿಗೆ ಜಾಥವನ್ನು ಜ.19ರಿಂದ 30ರವರೆಗೆ ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ಜಿಲ್ಲಾ ಸಂಚಾಲಕಿ ಸುಶೀಲಾ ನಾಡ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಆರಂಭಗೊಳ್ಳುವ ಜಾಥದಲ್ಲಿ ಸುಮಾರು 3000 ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. 12 ದಿನಗಳ ಕಾಲ ನಡೆಯುವ ಜಾಥವು ಜ.30 ರಂದು ಬೆಂಗಳೂರು ತಲುಪಲಿದ್ದು, ಅಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದರು.
ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಆಗಬೇಕು. ಮದ್ಯ ಸೇವಿಸಿ ಮೃತ ಪಟ್ಟ, ಆಸ್ಪತ್ರೆಯಲ್ಲಿರುವ ಮದ್ಯ ವ್ಯಸನಿಯ ಕುಟುಂಬ ಮತ್ತು ಕುಡಿತ ದಿಂದ ಸಂಭವಿಸಿದ ದುರ್ಘಟನೆಗಳಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಗಳಿಗೆ ಪರಿಹಾರ ನೀಡಬೇಕು. ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಿ, ಪುನರ್ವಸತಿ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಅಮ್ಮಣ್ಣಿ ಚೋರಾಡಿ, ಜಿಲ್ಲಾಧ್ಯಕ್ಷ ಪುತ್ರನ್, ಮಾಜಿ ಅಧ್ಯಕ್ಷ ಬೊಗ್ರ ಕೊರಗ, ಆಶಾ, ವಿಶಾಲ ಉಪಸ್ಥಿತರಿದ್ದರು.