ಮಂಗಳೂರು ವಿವಿ ಹ್ಯಾಂಡ್ಬಾಲ್ ಸ್ಪರ್ಧೆಗೆ ಚಾಲನೆ
ಉಡುಪಿ, ಜ.18: ನಗರದ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹಾಗೂ ಮಂಗಳೂರು ವಿವಿಗಳ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಹ್ಯಾಂಡ್ಬಾಲ್ ಚಾಂಪಿಯನ್ಷಿಪ್ಗೆ ಶುಕ್ರವಾರ ಬೆಳಗ್ಗೆ ಪಿಪಿಸಿ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾಯಿತು.
ಉಡುಪಿ ಶ್ರೀಅದಮಾರು ಮಠ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಹಾಗೂ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಶ್ರೀ ಪಂದ್ಯಕೂಟಕ್ಕೆ ಚಾಲನೆಯನ್ನು ನೀಡಿದರು. ಟ್ರಸ್ಟ್ನ ಉಪಾಧ್ಯಕ್ಷ, ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶೃಂಗೇರಿಯ ಶಾಸಕ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಟಿ.ಡಿ.ರಾಜೇಗೌಡ ಅವರು ಗುಣಮಟ್ಟದ ಶಿಕ್ಷಣದ ಮೂಲಕ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವುದು ಇದಕ್ಕೆ ಪೂರಕ ಚಟುವಟಿಕೆಯಾಗಿದೆ ಎಂದರು.
ಪಿಪಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಪಿಪಿಸಿ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಜಿ. ಎಸ್. ಚಂದ್ರಶೇಖರ್, ಗೌರವ ಕೋಶಾಧಿಕಾರಿ ಪ್ರದೀಪ್ಕುಮಾರ್, ಮಂಗಳೂರು ವಿವಿ ದೈಹಿಕ ಶಿಕ್ಷಣ ಕೇಂದ್ರದ ಉಪನಿರ್ದೇಶಕ ಡಾ.ಹರಿದಾಸ್ ಕೂಳೂರು, ಪಿಪಿಸಿಯ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಉಪಸ್ಥಿತರಿದ್ದರು.
ಕಾಲೇಜಿನ ಕನ್ನಡ ವಿಭಾಗದ ಮುಖಸ್ಥ ಡಾ.ಶ್ರೀಕಾಂತ ರಾವ್ ಸಿದ್ಧಾಪುರ ಸ್ವಾಗತಿಸಿದರೆ, ಉಪನ್ಯಾಸಕಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿದರು. ಡಾ.ಪ್ರಜ್ಞಾ ಮಾರ್ಪಳ್ಳಿ ವಂದಿಸಿದರು.