ಲೈಟ್ ಫಿಶಿಂಗ್ ವಿರುದ್ಧ ಮೀನುಗಾರರ ಪ್ರತಿಭಟನೆ: ಅಧಿಕಾರಿಗಳಿಗೆ ದಿಗ್ಬಂಧನ
ಮಲ್ಪೆ, ಜ. 29: ನಿಯಮ ಉಲ್ಲಂಘಿಸಿ ಬೆಳಕಿನ ಮೀನುಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಡದೋಣಿ ಮೀನುಗಾರರ ಒಕ್ಕೂಟ ಹಾಗೂ ಆಳ ಸಮುದ್ರ ಮೀನುಗಾರರ ಸಂಘದ ನೇತೃತ್ವದಲ್ಲಿ ಇಂದು ಮಲ್ಪೆ ಬಂದರಿನ ಮುಖ್ಯ ದ್ವಾರದ ಗೇಟು ಹಾಕಿ ಪ್ರತಿಭಟನೆ ನಡೆಸಲಾಯಿತು.
ಸ್ಥಳಕ್ಕೆ ಆಗಮಿಸಿದ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಪಾಶ್ವನಾರ್ಥ ಹಾಗು ಸಹಾಯಕ ನಿರ್ದೇಶಕ ಶಿವಕುಮಾರ್ ಅವರಿಗೆ ದಿಗ್ಬಂಧನ ಹೇರಿದ ಮೀನುಗಾರರು ನ್ಯಾಯ ಸಿಗುವವರೆಗೆ ಇಲ್ಲಿಂದ ತೆರಳಲು ಬಿಡಲ್ಲ ಎಂದು ಪಟ್ಟು ಹಿಡಿದರು.
ಗಣಿ ಸಚಿವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಪಾರ್ಶ್ವನಾಥ್ ಮನವಿ ಮಾಡಿದ್ದರೂ ಒಪ್ಪದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಬಂದರಿನಲ್ಲಿ ಧರಣಿ ಕುಳಿತ ಮೀನುಗಾರರು ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.