ಅಂಬೇಡ್ಕರ್ ವಿಚಾರಧಾರೆಯಿಂದ ಸಮಾನತೆಯ ಸಮಾಜ: ಚಿಂತಕ ಶಿವಸುಂದರ್
ಹಿರಿಯಡ್ಕ, ಫೆ.6: ಸತ್ಯ ಮತ್ತು ನ್ಯಾಯದ ಪರವಾಗಿ ನಿಂತರೆ ನಾವು ನಿಜ ವಾದ ಮನುಷ್ಯರಾಗುತ್ತೇವೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ವಿಚಾರಧಾರೆಗಳು ನಮ್ಮನ್ನು ಮನುಷ್ಯತ್ವದ ಹಾದಿಯಲ್ಲಿ ಮುನ್ನಡೆಸುತ್ತವೆ. ಇಂದಿನ ಯುವಕರು ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ಅರಿವನ್ನು ಮೂಡಿಸಿಕೊಂಡು ಸಮಾನತೆಯ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಚಿಂತಕ ಶಿವಸುಂದರ ಕರೆ ನೀಡಿದ್ದಾರೆ.
ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಂಗಳೂರು ವಿವಿ ಎನ್ನೆಸ್ಸೆಸ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.
ಎರಡು ದಿನಗಳ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರು ಪಾಲ್ಗೊಂಡಿದ್ದು, ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಕಾರ್ಯಕ್ರವುದ ಅಧ್ಯಕ್ಷತೆಯನ್ನು ವಹಿಸಿದ್ದರು.
ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕ ಡಾ. ಅಪ್ಪಾಜಿ ಗೌಡ, ವಿಶೇಷಾಧಿಕಾರಿ ಶ್ರೀನಿವಾಸಯ್ಯ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಸಂಚಾಲಕಿ ಸುಜಯಾ ಕೆ.ಎಸ್., ಎನ್ನೆಸ್ಸೆಸ್ ನಾಯಕರಾದ ರಾಹುಲ್, ಶ್ರೀವತ್ಸ, ಸಾಕ್ಷಿತಾ, ವಿಜೇತ, ವಿದ್ಯಾರ್ಥಿ ನಾಯಕ ರಾದ ಹರ್ಷಿತ್, ದೀಪಕ್, ಸುಧೀರ್ ಉಪಸ್ಥಿತರಿದ್ದರು.
ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಸುಭಾಷ್ ಎಚ್.ಕೆ. ಸ್ವಾಗತಿಸಿದರು. ಯೋಜನಾಧಿಕಾರಿ ಪ್ರವೀಣ ಶೆಟ್ಟಿ ವಂದಿಸಿ, ಡಾ.ಸೀಮಾ ಜಿ. ಕೆ. ಕಾರ್ಯಕ್ರಮ ನಿರೂಪಿಸಿದರು.