ಕೊಲೆ ಪ್ರಕರಣ: ಏಳು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು, ಫೆ.14: ಬಂದರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ನಡೆದ ಕೊಲೆ ಪ್ರಕರಣದ ಆರೋಪಿ, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ನಿವಾಸಿ ಮುಹಮ್ಮದ್ ಅಶ್ರಫ್ ಯಾನೆ ಅಚ್ಚು (40) ಬಂಧಿತ ಆರೋಪಿ.
ಈತ 2012ರಲ್ಲಿ ನಡೆದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿಯ ಕಾಂಚನಾ ಟೆಕ್ಸ್ಟೈಲ್ಸ್ ಮ್ಯಾನೇಜರ್ ದೀಪಕ್ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಆರೋಪಿಸಲಾಗಿದೆ.
ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡು 2012ರಲ್ಲೇ ವಿದೇಶಕ್ಕೆ ಪರಾರಿಯಾಗಿದ್ದನು. ಈತ ಕಳೆದ ತಿಂಗಳಿನಿಂದ ಉಳ್ಳಾಲದಲ್ಲಿ ತಿರುಗಾಡುತ್ತಿದ್ದಾನೆ ಎಂಬ ಮಾಹಿತಿಯ ಆಧಾರದಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ನೇತೃತ್ವದ ರೌಡಿ ನಿಗ್ರಹದಳ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮುಂದಿನ ಕ್ರಮಕ್ಕಾಗಿ ಮಂಗಳೂರು ನಗರ ಉತ್ತರ (ಬಂದರ್) ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
Next Story