ಮಂಗಳೂರು: ಯೋಧರ ಮೇಲೆ ದಾಳಿ ಖಂಡಿಸಿ ಬಿಜೆಪಿ ಪ್ರತಿಭಟನೆ
ಮಂಗಳೂರು, ಫೆ.18: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಖಂಡಿಸಿ ಮತ್ತು ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ ಭಯೋತ್ಪಾದಕನಿಗೆ ಪ್ರೇರಣೆ ನೀಡಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಪುಲ್ವಾಮಾ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತಕ್ಕ ಪ್ರತೀಕಾರ ಕೈಗೊಳ್ಳಲಿದ್ದಾರೆ. ಭಾರತೀಯ ಸೈನ್ಯಕ್ಕೆ ಪ್ರತಿಯೊಬ್ಬ ನಾಗರಿಕ ಬೆಂಬಲ ಮತ್ತು ಶಕ್ತಿ ತುಂಬಬೇಕು ಎಂದರು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು ಮಾತನಾಡಿ ಜವಾಹರಲಾಲ್ ನೆಹರೂ ಮಾಡಿದ ತಪ್ಪಿನಿಂದಾಗಿ ಕಾಶ್ಮೀರ ಸಮಸ್ಯೆ ಹುಟ್ಟಿಕೊಂಡಿದೆ. ಕೇಂದ್ರ ಸರಕಾರ ದಿಟ್ಟ ಕ್ರಮ ಕೈಗೊಳ್ಳುವ ಮೂಲಕ ಭಯೋತ್ಪಾದನೆಯನ್ನು ಮಟ್ಟ ಹಾಕಲಿದೆ. ರಾಜ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ, ಬರಹಗಳನ್ನು ಪ್ರಕಟಿಸುತ್ತಿರುವವರ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಮಾತನಾಡಿದರು.
ಶಾಸಕರಾದ ಎಸ್. ಅಂಗಾರ, ರಾಜೇಶ್ ನಾಯ್ಕ, ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮಾಜಿ ಶಾಸಕ ಎನ್. ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮುಖಂಡರಾದ ಪ್ರತಾಪಸಿಂಹ ನಾಯಕ್, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಜಿ.ಆನಂದ, ಬ್ರಿಜೇಶ್ ಚೌಟ, ಪೂಜಾ ಪೈ, ರಹೀಂ ಉಚ್ಚಿಲ್ ಮತ್ತಿತರರು ಪಾಲ್ಗೊಂಡಿದ್ದರು.