ಫೆ. 24: ಕ್ರೈಸ್ತ ಉದ್ಯಮಿಗಳ ಸಹಮಿಲನ ‘ಪ್ರೇರಣಾ’
ಉಡುಪಿ, ಫೆ.23: ಉಡುಪಿ ಜಿಲ್ಲೆಯ ಕ್ರೈಸ್ತ ಉದ್ಯಮಿಗಳ ಸಹ ಮಿಲನ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ‘ಪ್ರೇರಣಾ’ ಫೆ. 24ರ ಸಂಜೆ 5 ಗಂಟೆಗೆ ಉಡುಪಿಯ ಕಡಿಯಾಳಿಯಲ್ಲಿರುವ ಮಾಂಡವಿ ವಾಣಿಜ್ಯ ಕೇಂದ್ರದ ಮಾಂಡವಿ ಸಭಾಭವನದಲ್ಲಿ ನಡೆಯಲಿದೆ ಎಂದು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ನ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾದ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.
ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ನ ಜಂಟಿ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಉದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಯುವ ಸಾಧಕರಿಗೆ ಪ್ರೇರಣಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಕಾರ್ಕಳದ ಜೋಯಲ್ ವಿವಿಯನ್ ಮಥಾಯಸ್ಗೆ ಪ್ರೇರಣಾ ಯುವ ಉದ್ಯಮಿ, ಕುಂದಾಪುರದ ಶರ್ಮಿಳಾ ಬುತೆಲ್ಲೊ ಪ್ರೇರಣಾ ಮಹಿಳಾ ಉದ್ಯಮಿ ಹಾಗೂ ಕಾರ್ಕಳದ ಜೋನ್ ಆರ್. ಡಿಸಿಲ್ಲ ಪ್ರೇರಣಾ ಉದ್ಯಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದರು. ಸಭಾ ಕಾರ್ಯಕ್ರಮದ ಬಳಿಕ ಶಂಕರಪುರದ ಅನಿಲ್ ಡೆಸಾ ಮತ್ತು ಬಳಗದಿಂದ ಸಾಂಸ್ಕೃತಿಕ ಕಾರ್ಯಕ್ರಮವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಲ್ವಿನ್ ಕ್ವಾಡ್ರಸ್, ಡಾಲ್ಘಿ ಲೂವಿಸ್, ಮೆಕ್ಸಿಂ ಡಿಸೋಜ ಉಪಸ್ಥಿತರಿದ್ದರು.