ಮಿಜಾರು: ದೊಣ್ಣೆಯಿಂದ ಹೊಡೆದು ಯುವಕನ ಕೊಲೆ
ಮಂಗಳೂರು, ಮೇ 18: ಯುವಕನೋರ್ವನನ್ನು ಇಬ್ಬರು ದುಷ್ಕರ್ಮಿಗಳು ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ನಿನ್ನೆ ಮಧ್ಯರಾತ್ರಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರು ದೂಮಚಡವು ಕ್ರಾಸ್ ಎಂಬಲ್ಲಿ ನಡೆದಿದೆ
ಮೃತರನ್ನು ಮಿಜಾರು ಕುಂದೋಟ್ಟು ನಿವಾಸಿ ನವೀನ್(29) ಎಂದು ಗುರುತಿಸಲಾಗಿದೆ. ಸ್ಥಳೀಯ ನಿವಾಸಿಗಳಾದ ರಮೇಶ್(35) ಮತ್ತು ನಿತ್ಯಾನಂದ(40)ಹತ್ಯೆ ಆರೋಪಿಗಳಾಗಿದ್ದಾರೆ.
ಶುಕ್ರವಾರ ರಾತ್ರಿ 11:30ರ ಸುಮಾರಿಗೆ ಈ ಹತ್ಯೆ ನಡೆದಿದೆ. ನವೀನ್ ನಿನ್ನೆ ರಾತ್ರಿ ದೂಮಚಡವು ಕ್ರಾಸ್ ಬಳಿ ತನ್ನ ಸ್ನೇಹಿತರೊಬ್ಬರೊಂದಿಗೆ ಮಾತನಾಡುತ್ತಿದ್ದ ವೇಳೆ ಆರೋಪಿಗಳಾದ ರಮೇಶ್ ಮತ್ತು ನಿತ್ಯಾನಂದ ಕ್ಷುಲ್ಲಕ ಕಾರಣವನ್ನು ಮುಂದಿಟ್ಟು ನವೀನ್ ಜೊತೆ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ನವೀನ್ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ನವೀನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣಕಾಸಿನ ವಿಚಾರವಾಗಿ ಈ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಮಧ್ಯೆ ಕೊಲೆ ಆರೋಪಿಗಳು ಪರಾರಿಯಾಗಿದ್ದಾರೆ.
ದುಬೈಯಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಉದ್ಯೋಗಿಯಾಗಿದ್ದ ನವೀನ್ ಮೂರು ತಿಂಗಳ ಹಿಂದೆ ಊರಿಗೆ ಆಗಮಿಸಿದ್ದರು.
ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.