ವಿಜಯೋತ್ಸವದಲ್ಲಿ ಕುಣಿದ ಶೋಭಾ ಕರಂದ್ಲಾಜೆ
ಉಡುಪಿ, ಮೇ 23: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾರೀ ಅಂತರದಲ್ಲಿ ಎರಡನೆ ಬಾರಿಗೆ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಬ್ರಹ್ಮಗಿರಿಯಿಂದ ಹೊರಟ ವಿಜಯೋತ್ಸವದ ಮೆರವಣಿಗೆಯು ಬನ್ನಂಜೆ, ಸಿಟಿ ಬಸ್ ನಿಲ್ದಾಣ, ಕಡಿಯಾಳಿ ಮಾರ್ಗವಾಗಿ ಸಾಗಿ ಬಿಜೆಪಿ ಕಚೇರಿಯಲ್ಲಿ ಸಮಾಪನಗೊಂಡಿತು. ಬಳಿಕ ಶೋಭಾ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದರು. ನೂರಾರು ಸಂಖ್ಯೆಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಮಧ್ಯೆ ಬ್ರಹ್ಮಗಿರಿ ಸರ್ಕಲ್ನಲ್ಲಿ ಶೋಭಾ ಕರಂದ್ಲಾಜೆ ಕಾರ್ಯ ಕರ್ತರೊಂದಿಗೆ ಡಿಜಿ ಹಾಡಿಗೆ ಹೆಜ್ಜೆ ಹಾಕಿ ಕುಣಿದರು. ಇವರಿಗೆ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಉದಯ ಕುಮಾರ್ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಸಾಥ್ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಎಂ.ಪಿ.ಕುಮಾರಸ್ವಾಮಿ, ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಜೀವರಾಜ್, ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಸುನೀಲ್ ಕುಮಾರ್, ಯಶ್ಪಾಲ್ ಸುವರ್ಣ, ಲಾಲಾಜಿ ಆರ್. ಮೆಂಡನ್, ಪ್ರಭಾಕರ ಪೂಜಾರಿ, ತಿಂಗಳೆ ವಿಕ್ರಮಾರ್ಜನ್ ಹೆಗ್ಡೆ, ಶೀಲಾ ಕೆ.ಶೆಟ್ಟಿ, ನಳಿನಿ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.