ಮಳೆಗಾಲದ ತುರ್ತು ಕಾರ್ಯಾಚರಣೆಗೆ ದ.ಕ. ಜಿಲ್ಲಾಡಳಿತ ಸನ್ನದ್ಧ: ಯು.ಟಿ.ಖಾದರ್
ಮಂಗಳೂರು, ಜೂ.10: ಮಳೆಗಾಲದಲ್ಲಿ ಆಗಬಹುದಾದ ತೊಂದರೆಗಳ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣೆಗೆ ಮತ್ತು ತುರ್ತು ಪರಿಹಾರ ಕಾರ್ಯಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು, ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರ ಪ್ರದೇಶದಲ್ಲೂ ಮಳೆ ಚರಂಡಿಗಳ ಹೂಳೆತ್ತಲು ಸೂಚನೆ ನೀಡಲಾಗಿದೆ ಎಂದರು.
*ಅಕ್ರಮ ಮರಳುಗಾರಿಕೆಯ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ:
ಜಿಲ್ಲೆಯಲ್ಲಿ ಅಕ್ರಮ ಮರಳು ಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
*ಗಡಿ ಪ್ರದೇಶದಲ್ಲಿ ಜಿಪಿಎಸ್ ಆಧಾರಿತ ಚೆಕ್ ಪೊಸ್ಟ್
ಜಿಲ್ಲೆಯ ಗಡಿ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಜಿಪಿಎಸ್ ಆಧಾರಿತ ಚೆಕ್ ಪೋಸ್ಟ್, ಸಿಸಿಟಿವಿ ಕ್ಯಾಮರಾವನ್ನು ಅಳವಡಿಸುವ ಚಿಂತನೆ ಇದೆ ಎಂದು ಸಚಿವರು ತಿಳಿಸಿದರು.
*ನಗರದ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ 6ನೇ ಸ್ಥಾನಪಡೆದಿದೆ. ಸಾಕಷ್ಟು ಅಭಿವೃದ್ಧಿ ಯೋಜನೆಗಳು ಕಾರ್ಯಗತಗೊಂಡಿದೆ. 2,500 ಕೋಟಿ ರೂ.ನ ಕಾಮಗಾರಿ ಅನುಷ್ಠಾನಗೊಳ್ಳುತ್ತಿದೆ ಎಂದು ಯು.ಟಿ.ಖಾದರ್ ವಿವರಿಸಿದರು.
* ಹೆದ್ದಾರಿ ಕಾಮಗಾರಿಗಳ ಬಗ್ಗೆ ಶೀಘ್ರದಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಹಾಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಇಂಜಿನಿಯರ್ಗಳ ವರ್ಗಾವಣೆಯಿಂದ ಎರಡು ದಿನ ತಡವಾಗಿ ಸಭೆ ಕರೆದು ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.
*ಮಲ್ಪೆಯಲ್ಲಿ ಪುದು ಗ್ರಾಮ ಪಂಚಾಯತ್ ಸದಸ್ಯ ರಿಯಾಝ್ ಮೇಲೆ ನಡೆದ ಹಲ್ಲೆ ಖಂಡನೀಯ. ಈ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದೊಕೊಂಡಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರನ್ನು ಅಭಿನಂದಿಸುವುದಾಗಿ ಯು.ಟಿ.ಖಾದರ್ ತಿಳಿಸಿದ್ದಾರೆ.