ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಾರ್ಯಾರಂಭ
ಬ್ರಹ್ಮಾವರ, ಜೂ.10: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆಯ ನೂತನ ವರ್ಷಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಂದು ನಡೆದಿದ್ದು, ಇದರಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ರಘುಪತಿ ಭಟ್, ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಈಗ ಖಾಸಗಿ ಶಾಲೆಗಳಿಗೆ ತೀವ್ರ ಸ್ಪರ್ಧೆ ಒಡ್ಡುತಿದ್ದಾರೆ. ಕಲಿಕೆಯಲ್ಲಿ ಸರಕಾರಿ ಶಾಲೆಯ ಮಕ್ಕಳು ಹಿಂದೆ ಬಿದ್ದಿಲ್ಲ. ಫಲಿತಾಂಶದಲ್ಲೂ ಸರಕಾರಿ ಶಾಲೆಗಳ ಶಕ್ತಿ ಪ್ರದರ್ಶನವಾಗಿದೆ ಎಂದರು.
ಇಂದು ಸರಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವೂ ಉತ್ತಮ ರೀತಿಯಲ್ಲಿದೆ. ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಮನಪೂರ್ವಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ರಘುಪತಿ ಭಟ್ ನುಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲ ಶ್ರೀಧರ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಜಯಶ್ರೀ ಬಾಯರಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರ ವಸಂತ್ ಸೇರ್ವೇಗಾರ, ತಾಲೂಕು ಪಂಚಾಯತ್ ಸದಸ್ಯರಾದ ಸುನಿತಾ ಡಿ.ಶೆಟ್ಟಿ ಹಾಗೂ ಭುಜಂಗ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಆಶಾಲತಾ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.