ನಗರ ವಸತಿ ಯೋಜನೆ ಸಮಾಲೋಚನಾ ಸಭೆ: ಅಂಬೇಡ್ಕರ್ ವಸತಿ ಯೋಜನೆಗೆ 29 ಫಲಾನುಭವಿಗಳ ಆಯ್ಕೆ
ಉಡುಪಿ, ಜೂ.17: ನಗರ ವಸತಿ ಯೋಜನೆಯ ಸಮಾಲೋಚನಾ ಸಭೆಯು ಇಂದು ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದಿದ್ದು, ಈ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ಒಟ್ಟು 29 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಅಲ್ಲದೇ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ 50 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ನಗರದ ಶಿವಳ್ಳಿ, ಪುತ್ತೂರು ಪ್ರದೇಶಗಳಲ್ಲಿ ವಸತಿ ನಿವೇಶನಗಳನ್ನು ರಚಿಸಲು ಯೋಜನಾ ವರದಿ ತಯಾರಿಸುವಂತೆ ಕರ್ನಾಟಕ ರಾಜ್ಯದ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಹೌಸಿಂಗ್ ಬೋರ್ಡ್ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ, ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೇಕರ್, ನಗರಸಭೆಯ ಕಾರ್ಯಪಾಲಕ ಅಭಿಯಂತರ ಗಣೇಶ್, ಕರ್ನಾಟಕ ಹೌಸಿಂಗ್ ಬೋರ್ಡ್ನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿತರಿದ್ದರು.
Next Story