ತರಬಿಯತ್ ಎಜ್ಯುಕೇಶನ್ ಸೂಸೈಟಿ ಸ್ಥಾಪಕ ಡಾ. ಹಸನ್ ಬಾಪ ನಿಧನ
ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಸ್ಥಾಪಕರಾದ ಡಾ.ಎಂ.ಟಿ.ಹಸನ್ ಬಾಪ (79) ಸೋಮವಾರ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಪತ್ನಿ, ಓರ್ವ ಪುತ್ರಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಳೆದ ಮೂರುದಿನಗಳ ಹಿಂದೆ ನಮಾಝ್ ಮಾಡಲೆಂದು ಅಂಗಸ್ನಾನ(ವಝು) ಮಾಡುತ್ತಿರಬೇಕಾದರೆ ಅಕಸ್ಮಿಕವಾಗಿ ಬಿದ್ದು ತಲೆಗೆ ಪೆಟ್ಟು ತಗಲಿ ಮೂರ್ಚೆ ಹೋಗಿದ್ದರು. ಕೂಡಲೇ ಉಡಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 9 ಗಂಟೆ ಸುಮಾರು ನಿಧನರಾದರು.
ಮುಂಬೈಯ ತಿಬ್ಬಿಯಾ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಥಮ ಪ್ರಾಂಶುಪಾಲರಾಗಿ ಮತ್ತು ಅನಟೋಮಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಇವರು ಭಟ್ಕಳದ ತರಬಿಯತ್ ಎಜ್ಯುಕೇಶನ್ ಸೂಸೈಟಿಯನ್ನು ಸ್ಥಾಪಿಸುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ. ನಂತರದ ದಿನಗಳಲ್ಲಿ ತಂಝೀಮ್ ಸಂಸ್ಥೆಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಜಮಾಅತೆ ಇಸ್ಲಾಮಿ ಹಿಂದ್, ಇಸ್ಲಾಮಿಕ್ ವೆಲ್ಪೇರ್ ಸೂಸೈಟಿ, ಜಮಾಅತುಲ್ ಮುಸ್ಲಿಮೀನ್ ಸಂಸ್ಥೆಯಲ್ಲೂ ಸಕ್ರೀಯರಾಗಿದ್ದರು.
ಇವರ ನಿಧನಕ್ಕೆ ಅಂಜುಮನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್, ತಂಝೀಮ್ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವಾಝ್, ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್ ಸೇರಿದಂತೆ ವಿವಿಧ ಸಂಘಸಂಸ್ಥೆಗಳು, ಗಣ್ಯರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.