ಶೌಚಾಲಯ ರಹಿತ ಮನೆ ಸಮೀಕ್ಷೆ: ಮೀನಾಕ್ಷಿ ಶಾಂತಿಗೋಡು
ದ.ಕ. ಜಿಲ್ಲಾ ನೀರು-ನೈರ್ಮಲ್ಯ ಸಮಿತಿ ಸಭೆ
ಮಂಗಳೂರು, ಜೂ.20: ಗ್ರಾಮ ಪಂಚಾಯತ್ ಮಟ್ಟದಲ್ಲಿ ಶೌಚಾಲಯ ರಹಿತ ಕುಟುಂಬಗಳ ಸಮೀಕ್ಷೆ ನಡೆಸಬೇಕು. ದಾಖಲೆ ಇದ್ದೂ ಶೌಚಾಲಯ ಇಲ್ಲದಿರುವ ನೈಜ ಮಾಹಿತಿಯನ್ನು ಜುಲೈ 10 ರೊಳಗೆ ಜಿಪಂಗೆ ನೀಡಬೇಕು ಎಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್, ಜಿಲ್ಲಾ ನೆರವು ಘಟಕ, ಜಿಪಂನ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಸ ವಿಲೇವಾರಿ ಘಟಕ ಆದ ನಂತರವೂ ಕೆಲವೊಂದು ಕಡೆ ರಸ್ತೆಬದಿಗಳಲ್ಲಿ ಕಸದ ರಾಶಿ ಕಾಣಸಿಗುತ್ತಿದೆ. ಕಸ ವಿಲೇವಾರಿ ಘಟಕ ನಿರ್ವಹಣೆಯಲ್ಲಿ ಆಯಾ ಗ್ರಾಮ ಪಂಚಾಯತ್ನಲ್ಲೆ ಸಮಿತಿ ರಚಿಸಬೇಕು ಎಂದು ಹೇಳಿದರು.
ಜಿಪಂ ಸಿಇಒ ಡಾ.ಆರ್.ಸೆಲ್ವಮಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಜೂನ್ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಕಸ ವಿಲೇವಾರಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಸ ವಿಲೇವಾರಿ ನಡೆಸಲು ಸರಿಯಾದ ವ್ಯವಸ್ಥೆ ಇಲ್ಲದ ಕೆಲ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸುಡುವುದು ಕಂಡುಬರುತ್ತಿದೆ. ಇದರಿಂದ ಆರೋಗ್ಯದ ಮೇಲೆ ಉಂಟಾಗುವಂತಹ ಪರಿಣಾಮಗಳನ್ನು ತಿಳಿಸುವುದರ ಜೊತೆಯಲ್ಲಿ ಗ್ರಾಮ ಪಂಚಾಯತ್ ಜನಜಾಗೃತಿ ಕಾರ್ಯಕ್ರಮ ನಡೆಸಿ, ಕಟ್ಟಡ, ಹೊಟೇಲ್, ಬಾರ್ ಇನ್ನಿತರ ಕೈಗಾರಿಕ ಕೇಂದ್ರಗಳ ಪಟ್ಟಿ ಮಾಡಿ ಜಿಲ್ಲಾ ಪಂಚಾಯತ್ಗೆ ವಾರದೊಳಗೆ ನಿಖರವಾದ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ದನ ಗೌಡ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹೀಂ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಉಪಸ್ಥಿತರಿದ್ದರು.