ಹೂಡೆ ಸಾಲಿಹಾತ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ
ಉಡುಪಿ, ಜು.6: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ 2019-20ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾದ ಪ್ರಥಮ ಬಿಕಾಂ ಹಾಗೂ ಬಿಎ ತರಗತಿಗಳ ವಿದ್ಯಾರ್ಥಿನಿಯರಿಗೆ ಪ್ರೇರಣಾ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಮಾಜ ಸೇವಕಿ ವೆರೋನಿಕಾ ಕರ್ನೇಲಿಯೊ, ವಿದ್ಯಾರ್ಥಿಗಳ ಆಸಕ್ತಿಗೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳ ಬೇಕು. ಮಾನವೀಯ ವೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿದರೆ ಮಾತ್ರ ಶಿಕ್ಷಣದ ಆಶಯ ಈಡೇರಿದಂತಾಗುತ್ತದೆ ಎಂದು ಹೇಳಿದರು.
ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ಹೆಚ್ಚು ಹೆಚ್ಚು ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಇವುಗಳ ವಿರುದ್ಧ ಪ್ರತಿಭಟಿಸುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳ ಬೇಕು. ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಮಹಿಳೆ ತನಗೆ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಹೆದರದೇ ಛಲದಿಂದ ಮುಂದುವರಿಯಬೇಕು ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಉಪನ್ಯಾಸಕರು ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ.ಸಬೀನಾ ವಹಿಸಿದ್ದರು. ಆಯಿಷಾ ರಿಫಾ ಸ್ವಾಗತಿಸಿದರು. ಸೀಮಾ ಕೌಸರ್ ವಂದಿಸಿದರು. ವಿದ್ಯಾರ್ಥಿನಿ ಜುವೇರಿಯಾ ನಾಝ್ ಹಾಗೂ ಮುಶ್ರೀನ್ ಕಾರ್ಯಕ್ರಮ ನಿರೂಪಿಸಿದರು.