ಗುಂಪು ಹಲ್ಲೆಗೆ ಠಾಣಾಧಿಕಾರಿಗಳೇ ಹೊಣೆ: ಸಚಿವ ಯು.ಟಿ.ಖಾದರ್
ಮಂಗಳೂರು, ಜು.7: ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳಿಗೆ ಕಡಿವಾಣ ಹಾಕುವ ಅಗತ್ಯವಿದ್ದು, ಗುಂಪು ಹಲ್ಲೆ ನಡೆಯುವ ಸ್ಥಳದ ಆಯಾ ಪೊಲೀಸ್ ಠಾಣಾ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗುಂಪು ಹಲ್ಲೆಗಳ ಕುರಿತು 'ವಾರ್ತಾಭಾರತಿ'ಗೆ ರವಿವಾರ ಪ್ರತಿಕ್ರಿಯಿಸಿದ ಸಚಿವರು, ಗುಂಪು ಹಲ್ಲೆ ಘಟನೆಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಲು ಮಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
ರಾಜ್ಯ ಸರಕಾರವು ಅಪರಾಧ ಘಟನೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯ ವಾಹನಗಳನ್ನು ಮಂಜೂರು ಮಾಡಿದೆ. ಜಿಲ್ಲೆಯಲ್ಲಿ ಪಾಟ್ರೋಲಿಂಗ್ ಮಾಡುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಹಲ್ಲೆ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ತಿಳಿಸಿದರು.
ಹಲ್ಲೆ ನಡೆದ ಠಾಣಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ, ಅಶಾಂತಿಯುತ ಹೇಳಿಕೆ ಕೊಡುವಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.