ಅಡಿಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಇಲ್ಲ: ಕೇಂದ್ರ ಆರೋಗ್ಯ ಸಚಿವರಿಗೆ ಕರಾವಳಿ, ಮಲೆನಾಡು ಸಂಸದರ ನಿಯೋಗ ಮನವರಿಕೆ
ಮಂಗಳೂರು, ಜು.18: ಅಡಿಕೆ ಬಳಕೆಯ ಕುರಿತು ಸಂಸತ್ತಿನಲ್ಲಿ ಚುಕ್ಕೆರಹಿತ ಪ್ರಶ್ನೆಗೆ ಸರ್ಕಾರವು ಅಡಿಕೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ನಲ್ಲಿರುವ ಅಫಿಡವಿಟ್ ನ್ನು ಉಲ್ಲೇಖ ಮಾಡಿ ಉತ್ತರಿಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರ ನಿಯೋಗವು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಇವರನ್ನು ಭೇಟಿ ಮಾಡಿದೆ.
ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬುಧವಾರ ಸಚಿವರನ್ನು ಭೇಟಿ ಮಾಡಿದ ನಿಯೋಗವು ಅಡಿಕೆಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂಬುದರ ಬಗ್ಗೆ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಯು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ ಎಂಬುವುದು ತಿಳಿಸಿತು.
ಈ ಬಗ್ಗೆ ಸ್ಪಂದಿಸಿದ ಸಚಿವರು, ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯುಪಿಎ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ಈ ಅಫಿಡವಿಟ್ ನ್ನು ಹಿಂಪಡೆದುಕೊಳ್ಳುವ ಬಗ್ಗೆ ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್ ನಿಂದ ಅಫಿಡವಿಟ್ ನ್ನು ಹಿಂಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಸಂಸದರ ನಿಯೋಗದಲ್ಲಿ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮುಂತಾದವರಿದ್ದರು.