ಸ್ವಸ್ಥ ಸಮಾಜಕ್ಕಾಗಿ ಜಾಗೃತಿ ಅತ್ಯಗತ್ಯ: ಮೋಹನ್ ಆಳ್ವ
ಸ್ವಾಸ್ಥ ಸಂಕಲ್ಪ, ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ
ಮಂಗಳೂರು, ಜು.18: ಸಮಾಜದಲ್ಲಿ ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿ ತುಂಬಾ ಸುಧಾರಿಸಿದೆ. ಆದರೆ ಸ್ವಸ್ಥ ಸಮಾಜ ನಿರ್ಮಾಣ ಇನ್ನೂ ಆಗಿಲ್ಲ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಆವಾಗ ಮಾತ್ರ ಎಲ್ಲಾ ರೀತಿಯ ಸವಾಲುಗಳನ್ನು ಸಶಕ್ತವಾಗಿ ಎದುರಿಸಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿಪ್ರಾಯಪಟ್ಟರು.
ಮಂಗಳೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕರ್ಣಾಟಕ ಬ್ಯಾಂಕ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗುರುವಾರ ನಡೆದ ಸ್ವಾಸ್ಥ ಸಂಕಲ್ಪ, ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತು ಅತಿವೇಗದಲ್ಲಿ ಬದಲಾವಣೆಯಾಗಿದೆ. ಸೂಕ್ಷ್ಮವಾಗಿ ಅವಲೋಕಿಸಿದರೆ ಈ ಬದಲಾವಣೆಗೆ ಅಪವಾದದಂತಹ ಸನ್ನಿವೇಶದಲ್ಲಿ ನಾವಿದ್ದೇವೆ. ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳ ದಾಸರಾಗಿ ಬದುಕನ್ನು ಕತ್ತಲೆಗೆ ದೂಡುವ ಮಕ್ಕಳನ್ನು ಸರಿದಾರಿಗೆ ತರಲು ಶಿಕ್ಷಣ ಸಂಸ್ಥೆ ಗಳಿಗೂ ತ್ರಾಸದಾಯಕವಾಗಿದೆ. ಮಕ್ಕಳು ಇದರ ಕೆಡುಕುಗಳನ್ನು ಮನಗಂಡು ಸರಿದಾರಿಯಲ್ಲಿ ಮುನ್ನಡೆಯಬೇಕು ಎಂದು ಡಾ. ಮೋಹನ್ ಆಳ್ವ ಆಶಿಸಿದರು.
ಮುಖ್ಯ ಅತಿಥಿಯಾಗಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ ಮಾತನಾಡಿ, ದ.ಕ. ಜಿಲ್ಲೆಯು ಶಿಕ್ಷಣದಲ್ಲಿ ಸಾಕಷ್ಟು ಮುಂದಿದೆ. ಆದರೆ ಮಾದಕ ದ್ರವ್ಯಗಳ ಸಾಗಾಟ, ಮಾರಾಟದಿಂದಾಗಿ ಜಿಲ್ಲೆಗೆ ಕೆಟ್ಟು ಹೆಸರು ಬರುತ್ತಿವೆ. ಜವಾಬ್ದಾರಿಯುತ ನಾಗರಿಕರೆಲ್ಲರೂ ಈ ಜಾಲದ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ಸಮಾಜಬಾಹಿರ ಚಟುವಟಿಕೆಗಳನ್ನು ತಡೆಯುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಮಾತನಾಡಿ, ವಿದ್ಯಾವಂತರೇ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ವಿಷವರ್ತುಲದಿಂದ ವಿದ್ಯಾರ್ಥಿಗಳು ಹೊರ ಬರಬೇಕಾದರೆ ಜಾಗೃತಿಗಿಂತ ಸ್ವಯಂ ಮನವರಿಕೆ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಗಳೂರು ತಾಲೂಕು ಅಧ್ಯಕ್ಷ ಮಹಾಬಲ ಚೌಟ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ್, ಕೆನರಾ ಬ್ಯಾಂಕ್ ಎಜಿಎಂ ರಾಮದಾಸ್, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ.ಎಸ್.ಬಿ.ಅಪ್ಪಾಜಿ ಗೌಡ, ಶ್ರೀ.ಕ್ಷೇ.ಧ.ಗ್ರಾ.ಯೋ. ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯ ಎನ್ನೆಸ್ಸೆಸ್ಸ್ ಫಟಕ ಸಂಯೋಜಕಿ ವಿನೀತಾ ರೈ, ಜನಜಾಗೃತಿ ವೇದಿಕೆ ದ.ಕ. ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಮಹಮ್ಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ದಯಾನಂದ ಕತ್ತಲ್ಸಾರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್ ಯೋಜನಾಧಿಕಾರಿ ಉಮರಬ್ಬ ಸ್ವಾಗತಿಸಿದರು.
ಜನಜಾಗೃತಿ ಜಾಥಾ
ಸಭಾ ಕಾರ್ಯಕ್ರಮಕ್ಕೂ ಮುನ್ನ ನಗರದಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಜನಜಾಗೃತಿ ಜಾಥಾ ನಡೆಯಿತು. ಅಪರಾಧ ಮತ್ತು ಸಂಚಾರ ವಿಭಾಗದ ಉಪ ಆಯುಕ್ತ ಲಕ್ಷ್ಮೀ ಗಣೇಶ್ ಜಾಥಾ ಉದ್ಘಾಟಿಸಿದರು.