ಮಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು, ಆ.3: ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಶನಿವಾರ ಮಂಗಳೂರು ನ್ಯಾಯಾಲಯದ ಸಂಕೀರ್ಣದ ಜಿಲ್ಲಾ ಮುಖ್ಯ ನ್ಯಾಯಾಲಯದ ಹಳೆ ಕಟ್ಟಡದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಶಂಕರ್ ಭಟ್ 125ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿರುವ ಮಂಗಳೂರು ವಕೀಲರ ಸಂಘಕ್ಕೆ ರಾಜ್ಯ ಮತ್ತು ಹೊರ ರಾಜ್ಯದಲ್ಲೂ ಒಳ್ಳೆಯ ಹೆಸರಿದೆ. ಇಲ್ಲಿನ ಅನೇಕ ವಕೀಲರು ಹೈಕೋರ್ಟ್, ಸುಪ್ರೀಂ ಕೋರ್ಟ್ ಸಹಿತ ದೇಶದ ವಿವಿಧ ಕೋರ್ಟ್ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲೆಗೆ ಹೆಸರು ತಂದಿದ್ದಾರೆ. ಇಂತಹ ವಕೀಲರ ಸಂಘದಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಮುಂದಿನ ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆಯಲ್ಲಿ ಹಿರಿಯರಿಗೆ ಮನ್ನಣೆ ನೀಡಿ ಅವಿರೋಧ ಆಯ್ಕೆ ಮಾಡುವತ್ತ ವಕೀಲರು ಗಮನಹರಿಸಬೇಕಿದೆ ಎಂದು ಸಲಹೆ ನೀಡಿದರು.
ಮಂಗಳೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಎಂ.ಆರ್.ಬಳ್ಳಾಲ್ ನೂತನ ಅಧ್ಯಕ್ಷ ನರಸಿಂಹ ಹೆಗ್ಡೆಗೆ ಅಧಿಕಾರ ಹಸ್ತಾಂತರಿಸಿದರು. ಉಪಾಧ್ಯಕ್ಷರಾಗಿ ಜಿನೇಂದ್ರ ಕುಮಾರ್, ಕಾರ್ಯದರ್ಶಿಯಾಗಿ ಎಚ್.ವಿ. ರಾಘವೇಂದ್ರ, ಖಜಾಂಚಿಯಾಗಿ ಅರುಣಾ, ಜೊತೆ ಕಾರ್ಯದರ್ಶಿಯಾಗಿ ಶರ್ಮಿಳಾ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಕೂಡ ಅಧಿಕಾರ ಸ್ವೀಕರಿಸಿದರು.
ಕಾರ್ಯಕಾರಿ ಸಮಿತಿ ಸದಸ್ಯ ವಿಕ್ರಮ್ ಕಾರ್ಯಕ್ರಮ ನಿರೂಪಿಸಿದರು.