ಮಂಗಳೂರು: ರಸ್ತೆ ತ್ಯಾಜ್ಯ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಳೆ ತೀವ್ರತೆ ಕಡಿಮೆಯಾಗಿರುವುದರಿಂದ ಸಂಚಾರ ತಡೆಯಾಗಿದ್ದ ರಸ್ತೆಗಳಲ್ಲಿರುವ ಕಲ್ಲು, ಮಣ್ಣು, ಮರ ಮಟ್ಟುಗಳನ್ನು ಆದ್ಯತೆಯಲ್ಲಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೆದ್ದಾರಿ, ಮುಖ್ಯ ರಸ್ತೆ ಹಾಗೂ ಗ್ರಾಮಾಂತರ ರಸ್ತೆಗಳಲ್ಲಿ ಈಗಾಗಲೇ ನಿಂತಿರುವ ನೀರು ಇಳಿಮುಖವಾಗಿದೆ. ವಾಹನ ಸಂಚಾರ ಸುಗಮಗೊಳಿಸಲು ತ್ಯಾಜ್ಯ ತೆರವುಗೊಳಿಸಲು ಅಗತ್ಯ ಕಾರ್ಮಿಕರು ಮತ್ತು ಜೆಸಿಬಿಗಳನ್ನು ಬಳಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಹಾನಿಗೊಂಡಿರುವ ಮನೆಗಳಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಸಂತ್ರಸ್ತರಿಗೆ ಆಹಾರ ಕಿಟ್
ರಾಜ್ಯ ಸರಕಾರದಿಂದ ಸಂತ್ರಸ್ತರಿಗೆ ವಿತರಿಸಲು ಜಿಲ್ಲೆಗೆ 2000 ಆಹಾರ ಕಿಟ್ ಗಳು ಬಂದಿವೆ. ಪ್ರತೀ ಕಿಟ್ ನಲ್ಲಿ 10 ಕೆ.ಜಿ. ಅಕ್ಕಿ, ತಲಾ 1 ಕೆಜಿ ತೊಗರಿ ಬೇಳೆ, ಉಪ್ಪು, ಸಕ್ಕರೆ, ಹಾಗೂ ಎಣ್ಣೆ ಇರಲಿದೆ. ತಹಶೀಲ್ದಾರ್ ಗಳು ಈ ಕಿಟ್ ಗಳನ್ನು ಪಡೆದು ಸಂತ್ರಸ್ತರಿಗೆ ಇಂದೇ ವಿತರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.