ಸುವರ್ಣ ತ್ರಿಭುಜ ಬೋಟಿನ ಸಾಲ ತೀರಿಸಲು 25 ಲಕ್ಷ ರೂ.: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಆ.22: ಸಮುದ್ರದಲ್ಲಿ ಅವಘಡಕ್ಕೆ ಒಳಗಾದ ಮಲ್ಪೆಯ ಸುವರ್ಣ ತ್ರಿಭುಜ ಬೋಟಿನ ಪೂರ್ತಿ ಸಾಲ ತೀರಿಸುವ ನಿಟ್ಟಿನಲ್ಲಿ ಆ ಮೀನುಗಾರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ ಎಂದು ರಾಜ್ಯದ ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಪಕ್ಷದ ಜಿಲ್ಲಾ ಕಚೇರಿ ಯಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡುತಿದ್ದರು. ಜಿಲ್ಲೆಯ ಮರಳಿನ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗೆ ಸೂಚಿಸಿದ್ದು, ಒಂದು ವಾರದೊಳಗೆ ಈ ಸಮಸ್ಯೆ ಪರಿಹಾರವಾಗುವ ವಿಶ್ವಾಸ ಇದೆ ಎಂದರು.
ರಾಜ್ಯದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ಸಂಭ್ರಮಾ ಚಣೆ ಬೇಡ ಎಂಬುದಾಗಿ ಹೇಳಿದ್ದೆ. ಆದರೂ ಬೆಂಗಳೂರಿನಿಂದ ಮಂಗಳೂರಿಗೆ ಬರುವ ದಾರಿಯುದ್ದಕ್ಕೂ ಕಾರ್ಯಕರ್ತರು ಪ್ರೀತಿಯಿಂದ ನನ್ನನ್ನು ಸ್ವಾಗತಿಸಿ ದ್ದಾರೆ. ನನ್ನ ಎಲ್ಲ ಶ್ರಮವನ್ನು ಪಕ್ಷದ ಸಂಘಟನೆ ಹಾಗೂ ಉತ್ತಮ ಆಡಳಿತ ನೀಡಲು ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಉಪಾಧ್ಯಕ್ಷ ಶೀಲಾ ಕೆ.ಶೆಟ್ಟಿ ಅಭಿನಂದನಾ ಮಾತುಗಳನ್ನಾಡಿದರು. ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕುತ್ಯಾರ್ ನವೀನ್ ಶೆಟ್ಟಿ, ಸಂಧ್ಯಾ ರಮೇಶ್, ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.