ಮಂಗಳೂರು: ಅಂತಾರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು, ಆ.24: ನಗರದ ಹಂಪನಕಟ್ಟೆಯ ಬಳಿಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯುವ ದಿನಾಚರಣೆ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆಯು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿವಿ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ದಯಾನಂದ ನಾಯ್ಕ್, ವಿದ್ಯಾರ್ಥಿಗಳು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಸಾಗಬೇಕು. ಅಲ್ಲದೆ ಸೇವೆಯಲ್ಲೇ ಸಾರ್ಥಕತೆ ಬೆಳೆಸಿಕೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿ ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕದ (ಡಿಎಪಿಯುಸಿ) ಜಿಲ್ಲಾ ಮೇಲ್ವಿಚಾರಕ ಮಹೇಶ್ ಯುವ ದಿನಾಚರಣೆ ಮತ್ತು ಆರೋಗ್ಯವಂತ ಸಮಾಜದ ಮಹತ್ವವನ್ನು ವಿವರಿಸಿದರು. ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ, ಅಧ್ಯಕ್ಷತೆ ವಹಿಸಿದ್ದರು.
ಎನ್ಎಸ್ಎಸ್ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು. ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕಾಲೇಜನ್ನು ಪ್ರತಿನಿಧಿಸಿದ ಎನ್ಎಸ್ಎಸ್ ಸ್ವಯಂಸೇವಕರನ್ನು ಅಭಿನಂದಿಸಲಾಯಿತು.
ಎನ್ಎಸ್ಎಸ್ ಘಟಕಾಧಿಕಾರಿ, ಅರ್ಥಶಾಸ್ತ್ರ ಪ್ರಾಧ್ಯಾಪಕ ಸುರೇಶ್, ಉಪನ್ಯಾಸಕ ಧೀರಜ್ ಉಪಸ್ಥಿತರಿದ್ದರು. ತರುಣ್ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.