ರಸ್ತೆಗುಂಡಿಗಳನ್ನು ಮುಚ್ಚಲು ಶೀಘ್ರ ಕ್ರಮ ಕೈಗೊಳ್ಳಿ: ಉಸ್ತುವಾರಿ ಕಾರ್ಯದರ್ಶಿ
ಉಡುಪಿ, ಸೆ.21:ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ರಸ್ತೆಗಳಲ್ಲಿ ಉಂಟಾಗಿ ರುವ ಗುಂಡಿಗಳನ್ನು ಮುಚ್ಚಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಸೂಚಿಸಿದ್ದಾರೆ.
ಶನಿವಾರ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ನೆರೆ ಪರಿಹಾರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜಿಪಂ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ ಉಸ್ತುವಾರಿ ಕಾರ್ಯದರ್ಶಿಗಳು, ದುರಸ್ತಿ ಕಾರ್ಯಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಕುರಿತು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ನೀಡುವಂತೆ ಸೂಚಿಸಿದರು.
ಅದೇ ರೀತಿ ಪಿಡಬ್ಲ್ಯುಡಿ ರಸ್ತೆಗಳಲ್ಲಿರುವ ಗುಂಡಿಗಳನ್ನು ಸಹ ಮುಚ್ಚುವಂತೆ ಸೂಚಿಸಿದಾಗ, ಲೋಕೋಪಯೋಗಿ ಇಲಾಖೆಗೆ ಈಗಾಗಲೇ 10.85 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಗತ್ಯರುವ ಉಪಕರಣಗಳನ್ನು ಖರೀದಿಸಿ ಸಂಬಂದಪಟ್ಟ ಇಲಾಖೆಗಳಿಗೆ ವಿತರಿಸುವಂತೆ ಸೂಚಿಸಿದ ಉಸ್ತುವಾರಿ ಕಾರ್ಯದರ್ಶಿಗಳು ವಿಕೋಪದಿಂದ ಸಂಪೂರ್ಣ ಹಾನಿಯಾದ ಮನೆಗಳ ಜಿಪಿಎಸ್ ಮಾಡಿಸಿ, ರಾಜೀವ್ ಗಾಂಧೀ ವಸತಿ ನಿಗಮದ ಮೂಲಕ ಮನೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ಗಳಿಗೆ ಸೂಚಿಸಿದರು.
ಮರಳು ಸಮಸ್ಯೆಗೆ ಸಂಬಂಧಿಸಿದಂತೆ ಕೋಡಿಯಲ್ಲಿ ದಾಸ್ತಾನು ಮಾಡಿರುವ ಮರಳನ್ನು ಶೀಘ್ರದಲ್ಲಿ ವಿತರಿಸುವ ಕುರಿತು ಸಂಬಂದಪಟ್ಟ ಅಧಿಕಾರಿಗಳು 2 ದಿನಗಳಲ್ಲಿ ಸ್ಥಳವನ್ನು ಪರಿಶೀಲಿಸಿ ವರದಿ ನೀಡಲು ಹಾಗೂ ಮರಳು ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಮಹೇಶ್ವರ ರಾವ್, ಕಾರ್ಕಳದಲ್ಲಿ ನಾನ್ ಸಿಆರ್ಝಡ್ ವ್ಯಾಪ್ತಿಯ ಮರಳು ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಉಡುಪಿಯಲ್ಲಿ ಸಂಚಾರ ವ್ಯವಸ್ಥೆ ನಿರ್ವಹಣೆ ಕುರಿತಂತೆ, ಸುರಕ್ಷಿತ ಸೈಕಲ್ ಸ್ನೇಹಿ ವಲಯ ನಿರ್ಮಾಣ ಮಾಡುವ ಬಗ್ಗೆ ಜಿಲ್ಲಾಧಿಕಾರಿ, ಎಸ್ಪಿ, ಆರ್ಟಿಓ ಹಾಗೂ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಜಿಲ್ಲೆಯಲ್ಲಿ ಸಮುದಾಯ ನೀರಾವರಿ ಯೋಜನೆ ಅನುಷ್ಠಾನ ಕುರಿತಂತೆ ತೋಟಗಾರಿಕೆ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಪಿಎಂ ಕಿಸಾನ್ ಯೋಜನೆಯಲ್ಲಿ ರೈತರ ನೊಂದಣಿ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ವಾಡಿಕೆ ಮಳೆ 4140 ಮಿ.ಮೀ. ಆಗಿದ್ದು, ಇದುವರೆಗೆ 4426 ಮಿ.ಮೀ. ಮಳೆ ಬಿದ್ದಿದೆ. ಪ್ರಾಕೃತಿಕ ವಿಕೋಪದಡಿ ಒಟ್ಟು 6 ಮಾನವ ಜೀವ ಹಾನಿ, ಮನೆ ಹಾನಿ, ಬೆಳೆ ಹಾನಿ ಸೇರಿದಂತೆ ಒಟ್ಟು 1367 ಪ್ರಕರಣಗಳಲ್ಲಿ 2,43,31,534 ರೂ. ಅಂದಾಜು ನಷ್ಟ ಸಂಭವಿಸಿದ್ದು, 1343 ಪ್ರಕರಣಗಳಿಗೆ ಪರಿಹಾರವಾಗಿ 1,63,32,050 ರೂ. ಪರಿಹಾರ ವಿತರಿಸಲಾಗಿದೆ.ರಸ್ತೆ, ಸೇತುವೆ ಮತ್ತು ಕಟ್ಟಡಗಳಿಗೆ ಅಂದಾಜು 64235.89 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ವಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ ನಿಶಾ ಜೇಮ್ಸ್, ಡಿಎಫ್ಓ ಕಮಲ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.