ಮಾನವ ಹಕ್ಕು, ವಿಕಲಚೇತನರ ಕುರಿತು ಮಾಹಿತಿ ಕಾರ್ಯಕ್ರಮ
ಉಡುಪಿ, ಅ. 22: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಉಡುಪಿ, ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕು ಮತ್ತು ವಿಕಲಚೇತನರ ಕುರಿತ ಮಾಹಿತಿ ಕಾಯರ್ಕ್ರಮ ಕಾಲೇಜಿನಲ್ಲಿ ನಡೆಯಿತು.
ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ರೆಡ್ಕ್ರಾಸ್ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಚಂದ್ರ ನಾಯ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದರು.
ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರದ ಯೋಜನೆಗಳು ಅರ್ಹ ವ್ಯಕ್ತಿಗಳನ್ನು ಮುಟ್ಟುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸಗಳಿಗೆ ಇನ್ನಷ್ಟು ವೇಗ ಸಿಗಬೇಕಾದರೆ ಸಮಾಜದ ಪ್ರತಿಯೊಬ್ಬರ ಪಾತ್ರವೂ ಮುಖ್ಯವಾಗಿದೆ ಎಂದರು.
ರೆಡ್ಕ್ರಾಸ್ ಜಿಲ್ಲಾ ಸಂಸ್ಥೆಯ ಖಜಾಂಚಿ ಚಂದ್ರಶೇಖರ್, ಐಕ್ಯೂಎಸಿ ಸಂಚಾಲಕ ಡಾ.ಸುರೇಶ್ ರೈ, ಸಮಾಜಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್, ಸಮಾಜ ಸೇವಕ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಎಂಎಸ್ಡಬ್ಲೂ ವಿದ್ಯಾರ್ಥಿನಿ ಸನ್ನಿಧಿ ಸ್ವಾಗತಿಸಿ, ಪೂಜಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸರೋಜ ವಂದಿಸಿದರು.