ಕಾಸರಗೋಡು ಜಿಲ್ಲಾದ್ಯಂತ ನ.11ರವರೆಗೆ ನಿಷೇಧಾಜ್ಞೆ ಜಾರಿ
ಕಾಸರಗೋಡು, ನ.9: ಅಯೋಧ್ಯೆ ವಿವಾದ ತೀರ್ಪಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಸರಗೋಡು ಜಿಲ್ಲೆಯಲ್ಲಿ ಸೆಕ್ಷನ್ 144ರಂತೆ ಶುಕ್ರವಾರ ರಾತ್ರಿಯಿಂದ ಸೋಮವಾರ (ನ.11) ರಾತ್ರಿ 12ರ ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.
ಮಂಜೇಶ್ವರ, ಕುಂಬಳೆ, ಕಾಸರಗೋಡು, ಚಂದೇರ, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್ ಪಿಸಿ 144ರ ಅನ್ವಯ ಶುಕ್ರವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಶಾಂತಿ - ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ನೀಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ..ಸಜಿತ್ ಬಾಬು ಮುನ್ನೆಚ್ಚರಿಕೆ ನೀಡಿದ್ದಾರೆ.
ಜನರು ಗುಂಪು ಸೇರುವುದು, ಮಾರಕಾಸ್ತ್ರ ಸಾಗಾಟ, ಮೆರವಣಿಗೆ, ಸಭೆ ನಡೆಸುವುದು ಅಪರಾಧವಾಗಿದೆ.
ವಾಟ್ಸ್ಆ್ಯಪ್, ಫೇಸ್ ಬುಕ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲ ತಾಣಗಳ ಬಗ್ಗೆ ಪೊಲೀಸರು ನಿಗಾ ಇರಿಸಿದ್ದಾರೆ. ಪ್ರಚೋದನಾತ್ಮಕ ಸಂದೇಶ ಸೇರಿದಂತೆ ಯಾವುದೇ ರೀತಿಯ ಉಲ್ಲಂಘನೆ ನಡೆಸಿದ್ದಲ್ಲಿ ಜಾಮೀನುರಹಿತ ಮೊಕದ್ದಮೆ ದಾಖಲಿಸಿ ಬಂಧಿಸಲಾಗುವುದು ಎಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದಾರೆ.