ನಿಷೇಧಾಜ್ಞೆ ಉಲ್ಲಂಘಿಸಿ ಸಂಭ್ರಮಾಚರಣೆ: ಎಸ್ಪಿಯಿಂದ ಡಿಸಿಗೆ ವರದಿ
ಉಡುಪಿ, ನ.10: ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಜಿಲ್ಲಾಡಳಿತ ವಿಧಿಸಿದ್ದ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಬಿಲ್ಲಾಡಿ ಜಾನುವಾರುಕಟ್ಟೆ ಎಂಬಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಉಡುಪಿ ಜಿಲ್ಲಾಧಿಕಾರಿಗಳಿಗೆ ಇಂದು ಸಲ್ಲಿಸಲಾಗಿದೆ.
ಶನಿವಾರ ಬೆಳಗ್ಗೆ ಗ್ರಾಮದ ರಸ್ತೆಯಲ್ಲಿ ಸ್ಥಳೀಯ ಯುವಕರ ತಂಡ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣ ಗಳಲ್ಲಿ ಹರಿದಾಡಿದ್ದು, ಈ ಕುರಿತು ಎಸ್ಪಿ ನಿಶಾ ಜೇಮ್ಸ್ ಅವರಿಗೆ ದೂರು ಬಂದಿತ್ತು ಎನ್ನಲಾಗಿದೆ. ಅದರಂತೆ ಎಸ್ಪಿ ಈ ವಿಡಿಯೋ ಸಹಿತ ವರದಿಯನ್ನು ಜಿಲ್ಲಾಧಿಕಾರಿಳಿಗೆ ಒಪ್ಪಿಸಿದ್ದಾರೆ.
‘ಈ ಪ್ರಕರಣದ ವಿಡಿಯೋವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದ್ದು, ಮುಂದೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಉಲ್ಲಂಘನೆ ಮಾಡಿರುವ ಸಂಬಂಧ ನ್ಯಾಯಾಲಯದ ಮೂಲಕ ಖಾಸಗಿ ದೂರು ದಾಖಲಿಸಲಿದ್ದಾರೆ. ಅದರಂತೆ ಘಟನೆ ಸಂಭವಿಸಿದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳಲಿದ್ದಾರೆ’ ಎಂದು ಎಸ್ಪಿ ನಿಶಾ ಜೇಮ್ಸ್ ತಿಳಿಸಿದ್ದಾರೆ.