ನ.14ರಿಂದ ಶ್ರೀಕೃಷ್ಣ ಮಠದಲ್ಲಿ ಚಿಣ್ಣರ ಮಾಸೋತ್ಸವ
ಉಡುಪಿ, ನ.13: ಪರ್ಯಾಯ ಪಲಿಮಾರು ಮಠದ ವತಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಫಲಾನುಭವಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ನಡೆಯುವ ‘ಚಿಣ್ಣರ ಮಾಸೋತ್ಸವ’ದ ಉದ್ಘಾಟನೆ ನ.14ರಂದು ಸಂಜೆ 4ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಸತತವಾಗಿ ಒಂದು ತಿಂಗಳ ಕಾಲ ನಡೆಯುವ ಈ ಚಿಣ್ಣರ ಮಾಸೋತ್ಸವವನ್ನು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಪಲಿಮಾರು ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಉದ್ಯಮಿ ರಂಜನ್ ಕಲ್ಕೂರ್ ಭಾಗವಹಿಸಲಿದ್ದಾರೆ.
ಚಿಣ್ಣರ ಸಂತರ್ಪಣೆ ಯೋಜನೆಯಲ್ಲಿರುವ ಜಿಲ್ಲೆಯ ಎಲ್ಲಾ ಅನುದಾನಿತ ಶಾಲೆಗಳು ಇದರಲ್ಲಿ ಭಾಗವಹಿಸುತ್ತವೆ. ಪ್ರತಿದಿನ ಮೂರು ಶಾಲೆಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿವೆ. ವಿಜೇತ 3 ಶಾಲೆಗಳಿಗೆ ನಗದು ಬಹುಮಾನ ಮತ್ತು ಪಾರಿತೋಷಕ, ಅಲ್ಲದೇ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ 100 ಮಕ್ಕಳಿಗೆ ನಗದು ಬಹುಮಾನ ಮತ್ತು ಪಾರಿತೋಷಕಗಳನ್ನು ನೀಡಲಾಗುತ್ತದೆ ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.