ಉಡುಪಿ ಮಕ್ಕಳ ಸ್ನೇಹಿ ಜಿಲ್ಲೆಯಾಗಲಿ: ದಿನಕರ ಬಾಬು
ಉಡುಪಿ, ನ.14: ಉಡುಪಿ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಜಿಲ್ಲಾಡಳಿತದೊಂದಿಗೆ, ವಿವಿಧ ಸ್ವಯಂ ಸೇವಾ ಸಂಘಟನೆಗಳು ಸೇರಿದಂತೆ ಎಲ್ಲರೂ ಕೈಜೋಡಿಸಬೇಕಾದ ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೋಟರಿ ಉಡುಪಿ ಮತ್ತು ಚೈಲ್ಡ್ ಹೆಲ್ಪ್ಲೈನ್ ಉಡುಪಿ ಸಹಯೋಗದಲ್ಲಿ ವಳಕಾಡು ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ‘ಚೈಲ್ಡ್ಲೈನ್ ಸೇ ದೋಸ್ತಿ’ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಮಕ್ಕಳ ಹಕ್ಕು ಮತ್ತು ಸ್ವಾತಂತ್ರಕ್ಕೆ ಧಕ್ಕೆ ಬಾರದ ಸಮಾಜ ನಿರ್ಮಾಣ ಮಾಡುವ ಮೂಲಕ ಹಾಗೂ ಚೈಲ್ಡ್ ಹೆಲ್ಪ್ಲೈನ್ನ ಕಾರ್ಯಗಳಿಗೆ ಎಲ್ಲಾ ರೀತಿಯ ಬೆಂಬಲ ನೀಡುವ ಮೂಲಕ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದ ದಿನಕರ ಬಾಬು, ಮಕ್ಕಳಿಗೆ ನೀಡುವ ಶಿಕ್ಷಣ ಮಟ್ಟದಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಿದೆ ಹಾಗೂ ಮಕ್ಕಳಲ್ಲಿನ ಬುದ್ದಿವಂತಿಕೆಯನ್ನು ಬಳಸಿಕೊಳ್ಳಲು ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಗದೀಶ್, ಜವಾಹರಲಾಲ್ ನೆಹರು ಅವರಿಗೆ ಮಕ್ಕಳ ಬಗೆಗೆ ಹೆಚ್ಚಿನ ಕಾಳಜಿ ಇದ್ದು, ಇಂದಿನ ಮಕ್ಕಳೇ ಮುಂದಿನ ಭಾರತ, ಭಾರತ ಸದೃಢವಾಗಲು ಮಕ್ಕಳನ್ನು ಸದೃಢರ ನ್ನಾಗಿ ಮಾಡಬೇಕು ಎಂದು ಹೇಳಿದ್ದರು. ಮಕ್ಕಳಿಗೆ ಶಿಸ್ತು ಕಲಿಸುವುದು ಮಾತ್ರವಲ್ಲ ಅವರ ಭಾವನೆಗಳನ್ನು ಅರಿಯುವ ಬಗ್ಗೆ ಶಿಕ್ಷಣ ಸಂಸ್ಥೆಗಳು ತಿಳಿದಿರಬೇಕು. ಶಿಸ್ತಿನ ಹೆಸರಲ್ಲಿ ಮಕ್ಕಳನ್ನು ಕಟ್ಟಿಹಾಕಬೇಡಿ. ಮಕ್ಕಳ ದಿನಾಚರಣೆ, ಮಕ್ಕಳ ಹುಟ್ಟುಹಬ್ಬದ ದಿನವಾದರೂ ಮಕ್ಕಳಿಗೆ ಅವರ ಇಷ್ಟದ ಉಡುಪು ಧರಿಸಿ ಶಾಲೆಗೆ ಬರಲು ಅವಕಾಶ ನೀಡಿ ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಎಂಬುದು ಮಕ್ಕಳಿಗೆ ಪಠ್ಯ ಮಾತ್ರವಾಗದೇ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಲಿ. ಮಕ್ಕಳಲ್ಲಿರುವ ಕ್ರೀಡಾ ಮತ್ತು ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗೆ ಸಂಬಂದಿಸಿದಂತೆ ಇಡೀ ಜಿಲ್ಲಾಡಳಿತ ಮಕ್ಕಳೊಂದಿಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮಾತನಾಡಿ, ಮಕ್ಕಳು ಯಾವುದೇ ಸಮಸ್ಯೆಗೆ ಒಳಗಾದಲ್ಲಿ ಅಥವಾ ಸಮಸ್ಯೆ ಗಳಿಂದ ಬಳಲುತ್ತಿರುವುದು ಕಂಡು ಬಂದಲ್ಲಿ ಟೋಲ್ ಪ್ರೀ ಸಂಖ್ಯೆ 1098 ಗೆ ಕರೆ ಮಾಡಿ ನೆರವು ಪಡೆಯುವಂತೆ ತಿಳಿಸಿದರು.
ಅಧಿಕಾರಿಗಳೊಂದಿಗೆ ಸಂವಾದ: ಬಳಿಕ ಅಧಿಕಾರಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ಯಾರ್ಥಿನಿ ರಕ್ಷಿತಾ, ವಿವಿಧ ಆ್ಯಪ್ಗಳ ಮೂಲಕ ವಿದ್ಯಾರ್ಥಿ ಗಳು ಕಲಿಯುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಸ್ಥಗಿತಗೊಂಡಿದ್ದು, ಈ ನೆರವನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಅವರನ್ನು ಕೋರಿದರು.
ವಿವಿಧ ಆ್ಯಪ್ಗಳಲ್ಲಿ ಪಾಠ ಮಾಡುವ ಹೆಚ್ಚಿನ ಶಿಕ್ಷಕರು ಉಡುಪಿ ಮತ್ತು ದ.ಕ ಜಿಲ್ಲೆಯವರೇ ಇದ್ದಾರೆ. ಸರಕಾರಿ ಶಾಲೆಗಳಲ್ಲಿ ಆ್ಯಪ್ಗಳ ಮೂಲಕ ಬೋದನೆ ವಿಧಾನ ಕುರಿತಂತೆ ಸರಕಾರದ ಮಟ್ಟದಲ್ಲಿ ತೀರ್ಮಾನ ಆಗಬೇಕು ಹಾಗೂ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಕುರಿತಂತೆ ಹಲವು ಕಡೆಗಳಲ್ಲಿ ಎಸ್ಡಿಎಂಸಿಗಳ ಮತ್ತು ವಿವಿಧ ಸಿಎಸ್ಆರ್ ನಿಧಿ ಮೂಲಕ ಕಂಪ್ಯೂಟರ್ ನೀಡಲಾಗುತ್ತಿದೆ. ಉಳಿದಂತೆ ಎಲ್ಲಾ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವುದು ಸಹ ಸರಕಾರದ ಮಟ್ಟದಲ್ಲಿ ತೀರ್ಮಾನ ನಡೆಯಬೇಕು. ತಾವು ಸಲ್ಲಿಸಿರುವ ಈ ಅಹವಾಲನ್ನು ಶಿಕ್ಷಣ ಇಲಾಖೆ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಉತ್ತರಿಸಿದರು.
ತೊಂದರೆಗೆ ಒಳಗಾದ ಮಕ್ಕಳು 1098ಕ್ಕೆ ಕರೆ ಮಾಡಲು ಎಲ್ಲಾ ಸಂದರ್ಭ ದಲ್ಲಿ ಸಾಧ್ಯವಾಗದ ಕಾರಣ ಪ್ರತ್ಯೇಕ ಸಹಾಯವಾಣಿ ಕೇಂದ್ರ ತೆರೆದು ಅಲ್ಲಿಗೇ ತೆರಳಿ ಸಮಸ್ಯೆ ತಿಳಿಸಲು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದ ವಿದ್ಯಾರ್ಥಿನಿ ದಿವ್ಯಶ್ರೀ ಪ್ರಶ್ನೆಗೆ ಉತ್ತರಿಸಿದ ಎಸ್ಪಿ ನಿಶಾ ಜೇಮ್ಸ್, ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯಲ್ಲಿ ಮಕ್ಕಳ ಸಮಸ್ಯೆ ಆಲಿಸಲು ಅಧಿಕಾರಿ ಮತ್ತು ಮಹಿಳಾ ಸಿಬ್ಬಂದಿ ನೇಮಕ ಮಾಡಿದ್ದು, ಅವರಿಗೆ ಮಕ್ಕಳ ಸಮಸ್ಯೆ ಆಲಿಸುವ ಕುರಿತು ವಿಶೇಷ ತರಬೇತಿಯನ್ನೂ ನೀಡಲಾಗಿದೆ. ಮಕ್ಕಳು ಅವರಲ್ಲಿ ತಮ್ಮ ಸಮಸ್ಯೆ ತಿಳಿಸಿದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಭಿತ್ತಿಪತ್ರವನ್ನು ಎಸ್ಪಿ ನಿಶಾ ಜೇಮ್ಸ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ, ಮಕ್ಕಳ ರಕ್ಷಣೆ ಕುರಿತು ರಕ್ಷಾಬಂಧನವನ್ನು ಶಾಲಾ ಮಕ್ಕಳು ಕಟ್ಟಿದರು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ, ಶಿಕ್ಷಣ ಇಲಾಖೆಯ ಜಾಹ್ನವಿ, ಬಾಲ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್ ಬಿ ಪುರ್ಟಾಡೋ, ಮಾಜಿ ಅಧ್ಯಕ್ಷ ಬಿ.ಕೆ ನಾರಾಯಣ ಉಪಸ್ಥಿತರಿದ್ದರು.
ಉಡುಪಿ ರೋಟರಿ ಅಧ್ಯಕ್ಷ ಜನಾರ್ಧನ ಭಟ್ ಸ್ವಾಗತಿಸಿದರು. ಚೈಲ್ಡ್ ಹೆಲ್ಪ್ಲೈನ್ನ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು, ವಳಕಾಡು ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ವಂದಿಸಿದರು.
ಶಾಲೆಯಲ್ಲಿ ನೀರು ಕುಡಿಯಲು ಬೆಲ್
ಕೇರಳದಲ್ಲಿ ಮಕ್ಕಳಿಗೆ ನೀರು ಕುಡಿಯಲು ದಿನದಲ್ಲಿ 3 ಬಾರಿ ಶಾಲಾ ಬೆಲ್ ಬಾರಿಸುವ ಪದ್ದತಿ ಇದ್ದು, ಇದರಿಂದ ಮಕ್ಕಳ ಆರೋಗ್ಯದಲ್ಲಿ ಮಹತ್ತರ ಸುಧಾರಣೆಯಾಗಿರುವುದು ಕಂಡು ಬಂದಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಹೆಚ್ಚು ನೀರು ಕುಡಿಯುವುದು ಅಗತ್ಯವಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಸಹ ಈ ಯೋಜನೆಯನ್ನು ಜಾರಿಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.