ಸಖಿ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ: ಉಡುಪಿ ಡಿಸಿ
ಉಡುಪಿ, ಡಿ.13: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ‘ಸಖಿ ವನ್ ಸ್ಟಾಪ್ ಸೆಂಟರ್’ ಕಾರ್ಯನಿರ್ವಹಿಸುತಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನೆರವು ಒದಗಿಸುವಂತೆ ಜಿಲ್ಲಾ ಮಹಿಳಾಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ಟಾಸ್ಕ್ ಪೋರ್ಸ್ ಯೋಜನೆಯ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅ ರು ಮಾತನಾಡುತಿದ್ದರು.
ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿ ಜಿಲ್ಲೆಯಲ್ಲಿ ಸಖಿ ವನ್ ಸ್ಟಾಪ್ ಸೆಂಟರಿಗೆಂದೇ ನಿಟ್ಟೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಜಿಲ್ಲೆಯ ನೊಂದ ಮಹಿಳೆಯರಿಗೆ ಒಂದೇ ಸ್ಥಳದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವ ಈ ಕೇಂದ್ರದ ಕುರಿತಂತೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಗ್ರಾಮಸಭೆ ಮತ್ತು ಮಹಿಳಾ ಗ್ರಾಮ ಸಭೆಗಳಲ್ಲಿ, ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಮತ್ತು ಸಖೀ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಗ್ರಾಪಂಗಳಲ್ಲಿ ಪೋಸ್ಟರ್ಗಳು ಮತ್ತು ಕರಪತ್ರಗಳ ಮೂಲಕ ಸಹ ಮಾಹಿತಿ ನೀಡುವಂತೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಸಖಿ ಕೇಂದ್ರದಲ್ಲಿ ಜುಲೈನಿಂದ ನವೆಂಬರ್ವರೆಗೆ ಕೌಟುಂಬಿಕ ದೌರ್ಜನ್ಯದ 13, ಲೈಂಗಿಕ ಕಿರುಕುಳ1 ಮತ್ತು ಇತರೆ 7 ಸೇರಿದಂತೆ, ಒಟ್ಟು 21 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 6 ಪ್ರಕರಣಗಳು ಇತ್ಯರ್ಥಗೊಂಡಿವೆ. 8 ಪ್ರಕರಣ ನ್ಯಾಯಾಲಯದಲ್ಲಿದ್ದು, 7 ಪ್ರಕರಣಗಳು ಸಮಾಲೋಚನೆಯ ಹಂತದಲ್ಲಿವೆ. ನೊಂದ ಮಹಿಳೆಯರಿಗೆ ಸಾಂತ್ವನ ನೀಡುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಮಹಿಳಾ ದೌರ್ಜನ್ಯ ಪ್ರಕರಣ ಬಗ್ಗೆ ಮಾಹಿತಿ ಪಡೆದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಸಖಿ ಕೇಂದ್ರದ ಮೂಲಕ ನೆರವು ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಜಿಪಂ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿವೈಎಸ್ಪಿ ಜೈಶಂಕರ್, ಡಿಡಿಪಿಐ ಶೇಷಶಯನ ಕಾರಿಂಜ ಮತ್ತಿತರರು ಉಪಸ್ಥಿತರಿದ್ದರು.