ಡಿ.17ರಂದು ಕಾಪು ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ
ಕಾಪು, ಡಿ.14: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾಪು ಘಟಕದ ವತಿಯಿಂದ ಕಾಪು ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಶೋಧಕ, ಹಿರಿಯ ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯರ ಸರ್ವಾಧ್ಯಕ್ಷತೆಯಲ್ಲಿ ಡಿ.17ರಂದು ಮೂಡುಬೆಳ್ಳೆಯ ಸಂತ ಲಾರೆನ್ಸ್ ಚರ್ಚ್ನ ಸೌಹಾರ್ದ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಸಮ್ಮೇಳನವನ್ನು ಬೆಳಗ್ಗೆ 9:50ಕ್ಕೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಲಿದ್ದು, ಸಮ್ಮೇಳನದ ಗೌರವಾಧ್ಯಕ್ಷ ಅ.ವಂದನೀಯ ಕ್ಲೆಮೆಂಟ್ ಮಸ್ಕರೇನಸ್ ಹಾಗೂ ಕಾಣಿಯೂರು ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ ವಿಶೇಷ ಉಪಸ್ಥಿತರಿರುವರು. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಮರಣ ಸಂಚಿಕೆ ಬಿಡುಗಡೆ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿ, ಕಸಾಪ ಪೂರ್ವ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಅಪರಾಹ್ನ 3:30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಕನ್ನಡ ಉಪನ್ಯಾಸಕ ಶ್ರೀಧರ ಮೂರ್ತಿ ಸಮಾರೋಪ ಭಾಷಣ ಮಾಡಲಿದ್ದು, ಅದಾನಿ ಯುಪಿಸಿಎಲ್ ಪ್ರಾದೇಶಿಕ ಅಧ್ಯಕ್ಷ ಕಿಶೋರ್ ಆಳ್ವ ಸಾಧಕರನ್ನು ಸನ್ಮಾನಿಸಲಿ ರುವರು. ಬೆಳಿಗ್ಗೆ ಮೂಡುಬೆಳ್ಳೆ ಪೇಟೆಯಲ್ಲಿ ಭುವನೇಶ್ವರಿ ದೇವಿಯ ಆಕರ್ಷಕ ಶೋಭಾಯಾತ್ರೆ ನಡೆಯಲಿದೆ. ಸಮ್ಮೇಳನದಲ್ಲಿ ಚಿತ್ರಕಲಾ ಪ್ರದರ್ಶನ, ಪುಸ್ತಕ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾಪು ಕಸಾಪ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮತ್ತು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ.ದೇವದಾಸ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.