ಯಾರ್ಯಾರದೋ ಮಾತಿಗೆ ಮರುಳಾಗಬೇಡಿ: ಬ್ಯಾರಿ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್
ಮಂಗಳೂರು, ಡಿ.22: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರು ಸಹಿತ ದೇಶಾದ್ಯಂತ ನಡೆಯುವ ಪ್ರತಿಭಟನೆ ಮತ್ತು ಈ ಸಂದರ್ಭ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ನೀಡಿದ ಹೇಳಿಕೆಯ ವೀಡಿಯೋ ವೈರಲ್ ಆಗಿದೆ.
ಮುಸ್ಲಿಮರೇ... ಯಾರದೇ ಒತ್ತಾಯಕ್ಕೆ ಬಲಿಯಾಗಬೇಡಿ. ನಮಗೆಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ಆದರೆ, ಅದು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿರಲಿ. ಮಂಗಳೂರು ಸಹಿತ ಹಲವೆಡೆ ಪ್ರತಿಭಟನೆ ನಡೆದಿದೆ. ಆದರೆ, ಇದು ದಿಕ್ಕು ತಪ್ಪುತ್ತಿದೆ. ಈ ದೇಶದಲ್ಲಿ ಹಿಂದೂಗಳು ಮಾತ್ರ ಇರುತ್ತಾರೆ. ಮುಸ್ಲಿಮರು ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಕೆಲವು ನಕಲಿ ಜಾತ್ಯತೀತವಾದಿಗಳು ಹೇಳಿಕೊಂಡು ಅಮಾಯಕ ಮುಸ್ಲಿಂ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರು ಅಮಿತ್ ಶಾ ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದರೂ ಕೂಡ ಕೆಲವರು ಸುಳ್ಳು ಹೇಳುತ್ತಿದ್ದಾರೆ. ಅದರ ಫಲವಾಗಿ ಮಂಗಳೂರಿನಲ್ಲಿ ಇಬ್ಬರು ಗುಂಡೇಟಿನಿಂದ ಮೃತರಾಗಿದ್ದಾರೆ. ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೆ ಕಾರಣರು ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಭಾರತದಲ್ಲಿ ಜನಿಸಿದ ಮುಸ್ಲಿಮರ ಪೌರತ್ವವನ್ನು ಕಿತ್ತುಕೊಂಡರೆ ನಾನು ಬಿಜೆಪಿಗೆ ರಾಜೀನಾಮೆ ನೀಡುವೆ. ಧರ್ಮಕ್ಕೆ ಅನ್ಯಾಯವಾದರೆ ನಾನು ಧರ್ಮದ ಜೊತೆ ಇರುವೆ. ಅನ್ಯಾಯಕ್ಕೊಳಗಾದವರ ಪರ ನಿಲ್ಲುವೆ ಎಂದು ರಹೀಂ ಉಚ್ಚಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.