ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು: ದ.ಕ. ಜಿಲ್ಲಾಧಿಕಾರಿ
ಮಂಗಳೂರು, ಜ.13: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ರೂಪಿಸಿರುವ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳಲ್ಲಿ ನಿಗದಿ ಪಡಿಸಿರುವ ಗುರಿಯನ್ನು ನೂರಕ್ಕೆ ನೂರರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹೇಳಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಸಬೇಕು ಎಂದು ಡಿಸಿ ಸೂಚಿಸಿದರು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಜಿಲ್ಲೆಯಲ್ಲಿ ಆನ್ಲೈನ್ ಮೂಲಕ ಸ್ವೀಕರಿಸಿದ 10,077 ಅರ್ಜಿಗಳನ್ನು ಪರಿಶೀಲಿಸಿ, ನೋಂದಣಿ ಮಾಡುವ ಕಾರ್ಯನಡೆಯುತ್ತಿದ್ದು, ನವೆಂಬರ್ ಅಂತ್ಯದೊಳಗೆ ಸಿದ್ಧಪಡಿಸಿ ಆಯ್ಕೆ ಸಮಿತಿಯಲ್ಲಿ ಮಂಡಿಸಲಾಗುವುದು ಎಂದು ನಿಗಮದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ದ.ಕ. ಜಿಲ್ಲೆಯಲ್ಲಿ ಸ್ಮಶಾನ ಖಬರಸ್ಥಾನ ಜಮೀನು ಮಂಜೂರಾತಿಗೆ ಸಲ್ಲಿಸಿದ ಅರ್ಜಿಗಳಲ್ಲಿ ಮಂಜೂರುಗೊಂಡ 2 ಆಸ್ತಿಗಳ ವಿವರ ಸಂಪೂರ್ಣಗೊಂಡಿದ್ದು, 12 ಪ್ರಸ್ತಾವನೆ ಬಾಕಿ ಉಳಿದಿದೆ. ಶೈಕ್ಷಣಿಕ ಸೌಲಭ್ಯ ಉನ್ನತೀಕರಣ, ಅಲ್ಪಸಂಖ್ಯಾತರ ಆರ್ಥಿಕ ಚಟುವಟಿಕೆಗಳಲ್ಲಿ ಹಾಗೂ ಉದ್ಯೋಗಳಲ್ಲಿ ಸಮಾನತೆ, ಅಲ್ಪಸಂಖ್ಯಾತರ ಜೀವನಾಂಶ ಸುಧಾರಣೆ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
ಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾದ ಜಾಸ್ಟಿನ್ ಡಿಸೋಜ, ಪದ್ಮ ಪ್ರಸಾದ್ ಜೈನ್, ರಾಜ್ಯ ಮಟ್ಟದ ಪ್ರಧಾನಮಂತ್ರಿಗಳ ಕಾರ್ಯಕ್ರಮ ಅನುಷ್ಟಾನ ಸಮಿತಿ ನಾಮ ನಿರ್ದೇಶಿತ ಸದಸ್ಯ ಸುರೇಶ್ ಜೈನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಕ್ಫ್ ಇಲಾಖೆ, ಕಾರ್ಮಿಕ ಇಲಾಖೆ, ತೋಟಗಾರಿಕೆ ಇಲಾಖೆ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.