ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ
ಉಡುಪಿ, ಜ.17: ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಪರಾಹ್ನ ಉಡುಪಿಗೆ ಆಗಮಿಸಿ ಪರ್ಯಾಯ ದರ್ಬಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಮುಂಬೈಯಿಂದ ಅಪರಾಹ್ನ 12ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವೆ, ಅಲ್ಲಿಂದ ರಸ್ತೆ ಮಾರ್ಗವಾಗಿ 1:30ಕ್ಕೆ ಉಡುಪಿಗೆ ಬರಲಿದ್ದು, ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಪರಾಹ್ನ 3 ರಿಂದ 5 ರವರೆಗೆ ನಡೆಯುವ ಪರ್ಯಾಯ ದರ್ಬಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 6ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ತೆರಳುವ ನಿರ್ಮಲಾ ಸೀತಾರಾಮನ್, ಅಲ್ಲಿಂದ ಬೆಂಗಳೂರು ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸುವರು.
ರವಿವಾರ ಗೋವಿಂದ ಕಾರಜೋಳ: ರಾಜ್ಯ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ.ಕಾರಜೋಳ ಅವರು ರವಿವಾರ ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ರಾತ್ರಿ 10:30ಕ್ಕೆ ಧಾರವಾಡದಿಂದ ರಸ್ತೆ ಮೂಲಕ ಉಡುಪಿಗೆ ಆಗಮಿಸುವ ಸಚಿವರು ವಾಸ್ತವ್ಯ ಮಾಡುವರು.
ಮರುದಿನ ಜ.19ರಂದು ಬೆಳಗ್ಗೆ 9ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಮತ್ತು ಮಂಗಳೂರು ಜಿಲ್ಲೆಗಳ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅಪರಾಹ್ನ 12ಕ್ಕೆ ಕಚ್ಚೂರಿನಲ್ಲಿ ಧಾರ್ಮಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಪರಾಹ್ನ 2ಕ್ಕೆ ಕೃಷ್ಣ ಮಠಕ್ಕೆ ಭೇಟಿ ನೀಡುವರು. 3 ಗಂಟೆಗೆ ಉಡುಪಿ ಜಿಲ್ಲಾ ಮರಾಠಿ ಯುವ ಸಂಘಟನೆ ಹಾಗೂ ಮಹಿಳಾ ವೇದಿಕೆಯ ಉದ್ಘಾಟನಾ ಸಮಾರಂಭ ದಲ್ಲಿ ಭಾಗವಹಿಸಿ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.