ಪ.ಜಾತಿ/ಪಂಗಡದ ಮುಖಂಡರೊಂದಿಗೆ ಸಮಾಲೋಚನಾ ಸಭೆ
ಉಡುಪಿ, ಜ.23: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ವರದಿ ನೀಡಲು ನ್ಯಾ.ಎಚ್.ಎನ್.ನಾಗಮೋಹನ ದಾಸ್ ಅವರ ಏಕ ದಸ್ಯ ಆಯೋಗವನ್ನು ರಚಿಸಲಾಗಿದೆ.
ಆಯೋಗದ ಅಧ್ಯಕ್ಷರಾದ ಎಚ್.ಎನ್.ನಾಗಮೋಹನ ದಾಸ್ ಅವರು ಫೆ.10ರಂದು ಮೈಸೂರು ನಗರದ ಹುಣಸೂರು ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕರ್ನಾಟಕ ಕಲಾ ಮಂದಿರದಲ್ಲಿ ಬೆಳಗ್ಗೆ 10:30ಕ್ಕೆ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮುಖಂಡ ರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕಾರ ಹಾಗೂ ಸಮಾ ಲೋಚನಾ ಸಭೆಯನ್ನು ಆಯೋಜಿಸಲಾಗಿದ್ದು, ಉಡುಪಿ ಜಿಲ್ಲೆಯಿಂದ ಸಮುದಾಯದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಲು ಆಹ್ವಾನಿಸಲಾಗಿದೆ.
ಈ ಸಭೆಯಲ್ಲಿ ಸಂಘಟನೆಗಳ ಮುಖಂಡರು ಮತ್ತು ಸಂಘಸಂಸ್ಥೆಗಳ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬಹುದು. ಮೌಖಿಕವಾಗಿ ವಿಚಾರ/ಅಭಿಪ್ರಾಯ ತಿಳಿಸಬಯಸುವವರು ಕಾರ್ಯಕ್ರಮ ಪ್ರಾರಂಭಕ್ಕೆ ಒಂದು ಗಂಟೆ ಮೊದಲು ತೆರೆಯಲಾಗುವ ಕೌಂಟರ್ಗಳಲ್ಲಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಸರು ನೊಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ಅಭಿಪ್ರಾಯವನ್ನು ಮೌಖಿಕವಾಗಿ ತಿಳಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಇವರನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.