ಪ.ಜಾ, ಪ.ಪಂ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಮರುಪರಿಶೀಲನೆ ಅಗತ್ಯ: ಯು.ಟಿ.ಖಾದರ್
ಮಂಗಳೂರು, ಫೆ.13: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಮತ್ತು ಭಡ್ತಿ ನಿರ್ಧಾರದ ಹಕ್ಕನ್ನು ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕೇಂದ್ರ ಸರಕಾರ ಮರು ಪರಿಶೀಲನೆಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು ಅಥವಾ ಸೂಕ್ತ ಶಾಸನ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸಮಾಜದಲ್ಲಿ ದಲಿತರಿಗೆ ಶೋಷಿತರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಿರುವುದು ಸಮಾಜದಲ್ಲಿ ಸಮಾನತೆಯನ್ನು ತರುವ ದ್ರಷ್ಟಿಯಿಂದ ಈ ಅವಕಾಶವನ್ನು ಸಂವಿಧಾನದಲ್ಲಿ ನೀಡಲಾಗಿದೆ. ಇದೀಗ ಈ ಹಕ್ಕನ್ನು ಬದಲಾಯಿಸಿ ರಾಜ್ಯ ಸರಕಾರಕ್ಕೆ ಅಧಿಕಾರ ನೀಡಲು ಹೊರಟಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಸಂವಿಧಾನವನ್ನು ಬದಲಾಯಿಸಬೇಕು ಎಂದು ಕೆಲವು ಬಿಜೆಪಿ ಸಂಸದರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ತನ್ನ ಬದ್ಧತೆ ಯನ್ನು ಪ್ರದರ್ಶಿಸಬೇಕಾಗಿದೆ. ಸಂವಿಧಾನದ ಆಶಯವನ್ನು ರಕ್ಷಿಸಲು ಕಾಂಗ್ರೆಸ್ ಜನ ಜಾಗೃತಿಯನ್ನು ಹಮ್ಮಿಕೊಳ್ಳಲಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಅಡುಗೆ ಅನಿಲದ ಸಿಲಿಂಡರ್ ನ ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಕೇಂದ್ರ ಸರಕಾರ ಹಾಕಿರುವ ಹೊರೆಯಾಗಿದೆ. ದಿನಬಳಕೆಯ ಸಾಮಗ್ರಿಗಳ ಬೆಲೆ ಏರಿಕೆಯಾಗಿದ್ದರೂ ಸರಕಾರ ಯಾವುದೇ ನಿಯಂತ್ರಣ ಕ್ರಮ ಕೈಗೊಳ್ಳಲು ವಿಫಲ ವಾಗಿದೆ ಎಂದು ಯು.ಟಿ.ಖಾದರ್ ಟೀಕಿಸಿದರು.