ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಸಹಕಾರ ನೀಡಲು ಜಿಲ್ಲಾಡಳಿತಕ್ಕೆ ಸಚಿವ ಕೋಟ ಸೂಚನೆ
ಮಂಗಳೂರು, ಫೆ.23: ಕರಾವಳಿ ತೀರದ ಮಂಗಳೂರಿನಲ್ಲಿ ಮೊದಲ ಬಾರಿಗೆ ಮಾ.7 ಮತ್ತು 8ರಂದು ನಡೆಯುವ ರಾಜ್ಯ ಪತ್ರಕರ್ತರ ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವ ಕೋಟ ಆಹಾರ, ವಸತಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಫೆ.28ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ರಾಜ್ಯ ಸಂಘದಲ್ಲಿ ನೋಂದಣಿಯಾಗಿರುವ 7 ಸಾವಿರ ಪತ್ರಕರ್ತರ ಪೈಕಿ ಮೂರು ಸಾವಿರ ಪತ್ರಕರ್ತರು ಸಮ್ಮೇಳನಕ್ಕೆ ಹಾಜರಾಗುವ ಸಾಧ್ಯತೆ ಇದೆ. ಈ ಮೊದಲಿನ ಎಲ್ಲ ಸಮ್ಮೇಳನಗಳನ್ನು ಆಯಾ ಜಿಲ್ಲಾಡಳಿತಗಳ ನೆರವಿನಲ್ಲಿ ನೆರವೇರಿಸಲಾಗಿದೆ. ಇಲ್ಲಿ ಕೂಡ ಜಿಲ್ಲಾಡಳಿತದ ನೆರವಿನಲ್ಲಿ ಸಮ್ಮೇಳನವನ್ನು ಯಶಸ್ಸುಗೊಳಿಸುವ ವಿಶ್ವಾಸವಿದೆ. ಈ ಸಮ್ಮೇಳನ ವಿಭಿನ್ನವಾಗಿ ನಡೆಯಲಿದ್ದು, ರಾಜ್ಯ ಮಾತ್ರವಲ್ಲದೆ ನೇಪಾಳ, ಶೀಲಂಕಾ, ಬಾಂಗ್ಲಾ, ಮುಂಬೈ, ದಿಲ್ಲಿಯಿಂದಲೂ ಪ್ರತಿನಿಧಿಗಳು ಆಗಮಿಸಲಿದ್ದಾರೆ.ಈ ಸಂದರ್ಭ ಸುಮಾರು 50 ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.
ಜಿಲ್ಲಾಧಿಕಾರಿ ಸಿಂಧು ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ರಾಜೇಶ್, ವಾರ್ತಾಧಿಕಾರಿ ಖಾದರ್ ಶಾ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.