ಹಿರಿಯಡಕ: ಲ್ಯಾಪ್ಟಾಪ್ ವಿತರಣೆ, ಕೊಠಡಿಗಳ ಹಸ್ತಾಂತರ
ಹಿರಿಯಡಕ: ಲ್ಯಾಪ್ಟಾಪ್ ವಿತರಣೆ, ಕೊಠಡಿಗಳ ಹಸ್ತಾಂತರ ಉಡುಪಿ, ಮಾ.10: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ, ನೂತನ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ಲ್ಯಾಪ್ಟಾಪ್ಗಳ ವಿತರಣಾ ಸಮಾರಂಭ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೂತನ ಕೊಠಡಿಗಳನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರದ ಪ್ರೋತ್ಸಾಹಕರ ಯೋಜನೆಗಳ ಲಾಭ ಪಡೆದು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವಂತೆ ಕರೆ ನೀಡಿದರು.
ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕ ಡಾ.ಅಪ್ಪಾಜಿ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು, ಉನ್ನತಿಯನ್ನು ಸಾಧಿಸುವಂತೆ ಕರೆನೀಡಿದರು.
ಮಂಗಳೂರು ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಶೇಖರ ಹೆಬ್ಬಾರ್ ಸಿ. ಪ್ರಾನ ಭಾಷಣಕಾರರಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಡುಪಿ ತಾಪಂ ಸದಸ್ಯೆ ಸಂಧ್ಯಾ ಕಾಮತ್, ಬೊಮ್ಮರ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕುದಿ ವಸಂತ ಶೆಟ್ಟಿ, ಅಮೋಘ ಹಿರಿಯಡಕ ಇದರ ನಿರ್ದೇಶಕಿ ಪೂರ್ಣಿಮಾ ಸುರೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ನಾಯ್ಕಾ, ಉಡುಪಿ ನಿರ್ಮಿತಿ ಕೇಂದ್ರದ ಅಭಿಯಂತರ ವಿಜಯಕುಮಾರ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಅನಿಲ್ ಶೆಟ್ಟಿ, ಸತ್ಯಾನಂದ ನಾಯಕ್, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, 2019-20ನೇ ಶೈಕ್ಷಣಿಕ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಧಿಕಾರಿ ಸುಜಯಾ ಕೆ.ಎಸ್. ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ರವಿಚಂದ್ರ ಬಾಯಿರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.