ಲಾಕ್ ಡೌನ್ ನಡುವೆ ಮೂಡುಬಿದಿರೆಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ : ಪಾಲನೆಯಾಗದ ಸಾಮಾಜಿಕ ಅಂತರ !
ಮೂಡುಬಿದಿರೆ, ಎ.6: ಬಿಜೆಪಿ ಸ್ಥಾಪನಾ ದಿನವನ್ನು ಮೂಡುಬಿದಿರೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮವಾರ ಆಚರಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪಕ್ಷದ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಶಾಸಕ ಉಮಾನಾಥ್ ಕೋಟ್ಯಾನ್, ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ, ಕೇಶವ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪಾಲನೆಯಾಗದ ಸಾಮಾಜಿಕ ಅಂತರ !
ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಜನರು ಕಟ್ಟುನಿಟ್ಟಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಆದರೆ ಮೂಡುಬಿದಿರೆಯ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಸ್ಥಾಪನಾ ದಿನಾಚರಣೆಯಲ್ಲಿ ಸಾಮಾಜಿಕ ಅಂತರ ಪಾಲನೆಯನ್ನು ನಿರ್ಲಕ್ಷಿಸಿ ಪಕ್ಷದ ರಾಜ್ಯಾಧ್ಯಕ್ಷರೂ ಆದ ಸಂಸದ ನಳಿನ್ ಕುಮಾರ್, ಪಕ್ಷದ ಜಿಲ್ಲಾಧ್ಯಕ್ಷರ ಸಹಿತ ಪಕ್ಷದ 15ಕ್ಕೂ ಅಧಿಕ ಮುಖಂಡರು ಭಾಗವಹಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಒಂದಿಬ್ಬರು ಮಾಸ್ಕ್ ಧರಿಸಿದ್ದರೆ, ಉಳಿದವರು ಯಾವುದೇ ಮುಂಜಾಗ್ರತೆ ವಹಿಸದೆ ನಿಂತುಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನಸಾಮಾನ್ಯರು ಪಾಲಿಸುವ ನಿರ್ದೇಶನಗಳು ಜನಪ್ರತಿನಿಧಿಗಳಿಗೆ ಅನ್ವಯವಾಗುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.